ನವದೆಹಲಿ: 26 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಹೊಸ ಸರ್ಕಾರದ ಮೊದಲ ಸಚಿವ ಸಂಪುಟದ ಸಭೆಯಲ್ಲಿಯೇ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಎಸ್ಐಟಿ ರಚಿಸುತ್ತೇವೆ ಎಂದು ಹೇಳಿದೆ.
‘ನಾವು ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಾನುಭೂತಿ ಹೊಂದಿದ್ದೇವೆ. ಹಗರಣದಲ್ಲಿ ಭಾಗಿಯಾದವರನ್ನು ಹೊಣೆಗಾರರನ್ನಾಗಿ ಮಾಡುತ್ತೇವೆ’ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ ಹೇಳಿದ್ದಾರೆ.
‘ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ನಾವು ಹಲವು ಬಾರಿ ಹೇಳಿದ್ದೇವೆ. ಸಚಿವ ಸಂಪುಟದ ಮೊದಲ ಸಭೆಯಲ್ಲೇ ಸಿಎಜಿ ವರದಿಯನ್ನು ಇಡುತ್ತೇವೆ. ಭ್ರಷ್ಟಾಚಾರದ ಬಗ್ಗೆ ಇರುವ ಎಲ್ಲಾ ಪ್ರಕರಣಗಳ ತನಿಖೆಗೆ ಎಸ್ಐಟಿ ರಚನೆ ಮಾಡುತ್ತೇವೆ’ ಎಂದು ಸಚ್ದೇವ ತಿಳಿಸಿದ್ದಾರೆ.ದೆಹಲಿ ವಿಧಾನಸಭೆ ಚುನಾವಣೆಯ ಗೆಲುವಿನ ಶ್ರೇಯವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಸಲ್ಲಿಸಿದ್ದಾರೆ. ಅವರ ಮಾರ್ಗದರ್ಶನ ಗೆಲುವಿನ ದಡ ಸೇರಿಸಿತು ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ವಿಶ್ವಾಸವಿರಿಸಿ ಜನರು, ಅಭಿವೃದ್ಧಿಗಾಗಿ ಬಿಜೆಪಿಯನ್ನು ಆಯ್ಕೆ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಶೂನ್ಯ ಸಂಪಾದನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಕಾಂಗ್ರೆಸ್ ಇನ್ನೂ ಹೆಚ್ಚಿನ ಪರಿಶ್ರಮ ಪಡಬೇಕು’ ಎಂದು ಹೇಳಿದ್ದಾರೆ.
ಅಲ್ಲದೆ ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಇತರ ರಾಜ್ಯಗಳಲ್ಲಿ ತೀರ್ಮಾನಿಸಿದಂತೆ ದೆಹಲಿ ಬಗ್ಗೆಯೂ ನಿರ್ಧರಿಸುತ್ತಾರೆ ಎಂದಿದ್ದಾರೆ.













































