ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಹೆಚ್ಚಲಿದೆ ಬಿಸಿಲ ಧಗೆ

Picture of Savistara

Savistara

Bureau Report

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆಹೆಚ್ಚಲಾರಂಭಿಸಿದ್ದು, ಮುಂದಿನ ಐದು ದಿನಗಳಲ್ಲಿ ಕೆಲವೆಡೆ ಉಷ್ಣಾಂಶದಲ್ಲಿ 4ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಳವಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಹಲವೆಡೆ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಅಧಿಕ ಉಷ್ಣಾಂಶ ದಾಖಲಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಪ್ರತಿನಿತ್ಯ ಗರಿಷ್ಠ ಉಷ್ಣಾಂಶವು 35 ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ. ಮುಂದಿನ ಐದು ದಿನಗಳಲ್ಲಿ ಏರುಗತಿ ಪಡೆಯುವ ಸಾಧ್ಯತೆಯಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಳವಾಗುವ ಸಂಭವವಿದೆ. ದಕ್ಷಿಣ ಒಳನಾಡಿನಲ್ಲಿ ಎರಡು ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಸೋಮವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ (36.9 ಡಿಗ್ರಿ ಸೆಲ್ಸಿಯಸ್) ವರದಿಯಾಗಿದೆ. ಉತ್ತರ ಕನ್ನಡ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿಯೂ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ದಾಟಿದೆ. ಈ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಿನ ಉಷ್ಣಾಂಶ ದಾಖಲಾಗಿದೆ.

[t4b-ticker]
error: Content is protected !!