ಪುಣ್ಯಕ್ಷೇತ್ರಗಳ ಬಳಿ ಸೋಪು, ಶ್ಯಾಂಪೂ ಮಾರಾಟ ನಿಷೇಧಿಸಿ: ಸಚಿವ ಖಂಡ್ರೆ ಸೂಚನೆ

Picture of Savistara

Savistara

Bureau Report

ಬೆಂಗಳೂರು: ಪುಣ್ಯ ಕ್ಷೇತ್ರಗಳ ನದಿ, ಸರೋವರ, ಕಲ್ಯಾಣಿ,ಸ್ನಾನಘಟ್ಟಗಳ 500 ಮಿಟರ್ ವ್ಯಾಪ್ತಿಯಲ್ಲಿ ಸಮೀಪ ಸೋಪು, ಶ್ಯಾಂಪೂಗಳ ಮಾರಾಟವನ್ನು ನಿಷೇಧಿಸಿ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಪುಣ್ಯಕ್ಷೇತ್ರಗಳ ಬಳಿ ಇರುವ ಜಲಮೂಲಗಳಲ್ಲಿ ಭಕ್ತರು, ಪ್ರವಾಸಿಗರು ಸ್ನಾನಮಾಡಿ ಉಳಿದ ಶ್ಯಾಂಪೂ ಮತ್ತು ಸೋಪಿನ ಸ್ಯಾಷೆಗಳನ್ನು ದಂಡೆಯಲ್ಲಿ ಎಸೆದು ಹೋಗುತ್ತಿದ್ದಾರೆ. ಅಲ್ಲಿನ ಪರಿಸರದಲ್ಲಿ ಕಸದ ಪ್ರಮಾಣ ಹೆಚ್ಚುವುದಲ್ಲದೆ, ಈ ರಾಸಾಯನಿಕ ವಸ್ತು ಮತ್ತು ಪ್ಲಾಸ್ಟಿಕ್ ಜಲಮೂಲವನ್ನು ಸೇರುತ್ತಿವೆ. ಇದರಿಂದ ನೀರು ಕಲುಷಿತವಾಗುತ್ತಿದೆ. ಜತೆಗೆ ಜಲಚರಗಳೂ ಸಾಯುತ್ತಿವೆ’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.’ಪುಣ್ಯಕ್ಷೇತ್ರಗಳ ಬಳಿ ಇರುವ ಸಣ್ಣ-ಪುಟ್ಟ ಅಂಗಡಿಗಳಲ್ಲಿ ಒಂದೆರಡು ರೂಪಾಯಿಯ ಶ್ಯಾಂಪೂ ಮತ್ತು ಐದರಿಂದ ಹತ್ತು ರೂಪಾಯಿಯ ಸೋಪಿನ ಪ್ಯಾಕೆಟ್ ಮಾರಾಟ ಮಾಡಲಾಗುತ್ತಿದೆ. ಅಗ್ಗದ ಬೆಲೆಯಲ್ಲಿ ಸಿಗುವುದರಿಂದ, ಉಳಿದ ಸೋಪು-ಶ್ಯಾಂಪೂವನ್ನು ಜನರು ಅಲ್ಲೇ ಎಸೆದು ಹೋಗುತ್ತಾರೆ. ಹೀಗಾಗಿ ಇವು ಸುಲಭವಾಗಿ ಸಿಗದಂತೆ ಕ್ರಮ ತೆಗೆದುಕೊಳ್ಳಬೇಕು. ಇದಕ್ಕಾಗಿ ಪುಣ್ಯಕ್ಷೇತ್ರಗಳ ಜಲಮೂಲಗಳಿಂದ 500 ಮೀಟ‌ರ್ ವ್ಯಾಪ್ತಿಯಲ್ಲಿ ಇವುಗಳ ಮಾರಾಟವನ್ನು ನಿಷೇಧಿಸಬೇಕು’ ಎಂದು ಸೂಚಿಸಿದ್ದಾರೆ.

‘ಹಲವು ಭಕ್ತರು ಮೂಢನಂಬಿಕೆಗಳ ಕಾರಣದಿಂದ, ಸ್ನಾನದ ನಂತರ ಒದ್ದೆ ಬಟ್ಟೆಗಳನ್ನು ನೀರಿನಲ್ಲೇ ಹರಿಬಿಟ್ಟು ಹೋಗುತ್ತಿದ್ದಾರೆ. ಕೆಲವು ತೀರ್ಥಕ್ಷೇತ್ರಗಳಲ್ಲಂತೂ ರಾಶಿರಾಶಿ ವಸ್ತ್ರಗಳು ಬಿದ್ದಿವೆ. ಇದರಿಂದಲೂ ಸ್ವಚ್ಛತೆ ಹಾಳಾಗುತ್ತಿದೆ ಮತ್ತು ಪುಣ್ಯಕ್ಷೇತ್ರಗಳ ಜಲಮೂಲಗಳು ಕಲುಷಿತವಾಗುತ್ತಿವೆ. ಈ ಕ್ರಿಯೆಯನ್ನೂ ನಿರ್ಬಂಧಿಸುವ ಕೆಲಸ ಮಾಡಿ’ ಎಂದು ಸಚಿವರು ಸೂಚಿಸಿದ್ದಾರೆ.

‘ಸಂಬಂಧಿತ ಇತರ ಇಲಾಖೆಗಳ ನೆರವು ಮತ್ತು ಸಹಕಾರ ಪಡೆದು ಈ ಸೂಚನೆಗಳನ್ನು ಜಾರಿಗೆ ತರಬೇಕು. ಆಗ ಮಾತ್ರ ರಾಜ್ಯದ ನದಿ-ಕೊಳ, ಸರೋವರಗಳನ್ನು ಸ್ವಚ್ಛವಾಗಿ ಇರಿಸಿಕೊಳ್ಳಲು ಸಾಧ್ಯ’ ಎಂದಿದ್ದಾರೆ.

[t4b-ticker]
error: Content is protected !!