ಶಹಜಹಾನ್ಪುರ(ಉತ್ತರ ಪ್ರದೇಶ): ನಗರದಲ್ಲಿ ಹೋಳಿ ಹಬ್ಬದ ಅಂಗವಾಗಿ ಹಮ್ಮಿಕೊಳ್ಳಲಾಗುವ ಐತಿಹಾಸಿಕ ‘ಲಾಟ್ ಸಾಹೇಬ್’ ಮೆರವಣಿಗೆ ಸಾಗುವ ಮಾರ್ಗದಲ್ಲಿನ ಮಸೀದಿಗಳನ್ನು ಟಾರ್ಪಾಲಿನ್ನಿಂದ ಮುಚ್ಚಲು ನಗರ ಪಾಲಿಕೆ ನಿರ್ಧರಿಸಿದೆ.
“ಲಾಡ್ ಸಾಹೇಬ್’ ಮೆರವಣಿಗೆ ಸಾಗುವ ಮಾರ್ಗದಲ್ಲಿನ 20 ಮಸೀದಿಗಳಿಗೆ ಟಾರ್ಪಾಲಿನ್ ಹೊದಿಸಲಾಗುವುದು. ಈ ಮಾರ್ಗದುದ್ದಕ್ಕೂ 350 ಸಿ.ಸಿ.ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ’ ಎಂದು ಪಾಲಿಕೆ ಆಯುಕ್ತ ವಿಪಿನ್ ಕುಮಾರ್ ಮಿಶ್ರಾ ಹೇಳಿದ್ದಾರೆ.’ಸುರಕ್ಷತೆ ದೃಷ್ಟಿಯಿಂದ ಮಸೀದಿಗಳು ಹಾಗೂ ಟ್ರಾನ್ಸ್ಫಾರ್ಮ್ರಗಳ ಬಳಿ ತಡೆಗೋಡೆಗಳನ್ನು ನಿರ್ಮಿಸಲಾಗಿದೆ’ ಎಂದೂ ಹೇಳಿದ್ದಾರೆ.
‘ಲಾಟ್ ಸಾಹೇಬ್’ ಮೆರವಣಿಗೆ 18ನೇ ಶತಮಾನದಿಂದ ನಡೆದುಕೊಂಡು ಬರುತ್ತಿರುವ ಸಂಪ್ರದಾಯ. ಬ್ರಿಟಿಷ್ ಅಧಿಕಾರಿಯಂತೆ ವೇಷ ತೊಟ್ಟ ವ್ಯಕ್ತಿ ಎತ್ತಿನ ಗಾಡಿಯಲ್ಲಿ ಕುಳಿತುಕೊಂಡಿರುತ್ತಾನೆ. ಈ ಗಾಡಿ ಸಾಗುವಾಗ ಜನರು ಈ ವ್ಯಕ್ತಿಯತ್ತ ಪಾದರಕ್ಷೆಗಳನ್ನು ಎಸೆಯುತ್ತಾರೆ. ಈ ವಿಧಿಯೊಂದಿಗೆ ಹೋಳಿ ಆಚರಣೆಗೆ ಚಾಲನೆ ಸಿಗುತ್ತದೆ.













































