ಡಿಲಿಮಿಟೇಷನ್ ಸಭೆಗೆ ನನಗೆ ಬರಲು ಸಾಧ್ಯವಾಗಲ್ಲ, ಡಿಸಿಎಂ ಡಿಕೆಶಿಗೆ ಪಾಲ್ಗೊಳ್ಳಲು ಹೇಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಮಿಳುನಾಡು ಸಿಎಂ ಸ್ಟಾಲಿನ್ಗೆ ಪತ್ರ ಬರೆದಿದ್ದಾರೆ.
ಬೆಂಗಳೂರು : ಪೂರ್ವ ನಿಯೋಜಿತ ಕಾರ್ಯಕ್ರಮ ಇರುವುದರಿಂದ ಮಾರ್ಚ್ 22ಕ್ಕೆ ಕ್ಷೇತ್ರ ಪುನರ್ವಿಂಗಡನೆ ಸಂಬಂಧ ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಮಿಳುನಾಡು ಸಿಎಂ ಎಂ. ಕೆ ಸ್ಟಾಲಿನ್ಗೆ ಪತ್ರ ಬರೆದಿದ್ದಾರೆ.ತನ್ನ ಬದಲಿಗೆ ಸಭೆಯಲ್ಲಿ ಪಾಲ್ಗೊಳ್ಳುವಂತೆ ಡಿಸಿಎಂ ಡಿ. ಕೆ ಶಿವಕುಮಾರ್ಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ನೀವು ಮಾರ್ಚ್ 7ರಂದು ಬರೆದ ಪತ್ರ ನನಗೆ ತಲುಪಿದೆ. ರಾಜ್ಯಗಳ ಸ್ವಾಯತ್ತತೆ ಬಗ್ಗೆ ಹಲವು ಗಂಭೀರ ವಿಚಾರಗಳನ್ನು ನೀವು ಪ್ರಸ್ತಾಪಿಸಿದ್ದೀರಿ. ಕ್ಷೇತ್ರ ಪುನರ್ವಿಂಗಡನೆ ಸಂಬಂಧ ಮಹತ್ವದ ವಿಚಾರವನ್ನು ಎತ್ತಿದ್ದೀರಿ. ಸಮಾನಮನಸ್ಕ ರಾಜ್ಯಗಳು ಈ ವಿಚಾರವನ್ನು ಆಳವಾಗಿ ಚರ್ಚಿಸುವ ಅಗತ್ಯ ಇದೆ ಎಂದು ತಿಳಿಸಿದ್ದಾರೆ.ಈ ಸಂಬಂಧ ಏರ್ಪಡಿಸಿರುವ ಸಭೆಯಲ್ಲಿ ಪಾಲ್ಗೊಳ್ಳಲು ನಾನು ಇಚ್ಛಿಸಿದ್ದೆ. ಆದರೆ, ಪೂರ್ವನಿಯೋಜಿತ ಕಾರ್ಯಕ್ರಮ ಇರುವುದರಿಂದ ನನಗೆ ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಮಾ. 22ರಂದು ನಡೆಯುವ ಸಭೆಯ ಪ್ರಾಮುಖ್ಯತೆಯನ್ನು ಪರಿಗಣಿಸಿ ನಾನು ಡಿಸಿಎಂ ಡಿ. ಕೆ ಶಿವಕುಮಾರ್ರಿಗೆ ಪಾಲ್ಗೊಳ್ಳುವಂತೆ ಕೋರುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.ನಿನ್ನೆ ತಮಿಳುನಾಡು ಸಚಿವ ಪೊನ್ನುಮುಡಿ ನಿಯೋಗ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕ್ಷೇತ್ರ ಮರುವಿಂಗಡನೆ ಸೇರಿ ದಕ್ಷಿಣ ಭಾರತ ವಿರೋಧಿ ಕೇಂದ್ರದ ನಡೆ ಬಗ್ಗೆ ಚರ್ಚೆ ನಡೆಸಿದರು.
ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದರು. ತಮಿಳುನಾಡಿನ ಅರಣ್ಯ ಸಚಿವರಾದ ಡಾ. ಕೆ ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಚರ್ಚಿಸಿದರು. ಡಿಲಿಮಿಟೇಷನ್ ಮತ್ತಿತರ ಸಂಗತಿಗಳ ವಿಚಾರದಲ್ಲಿ ಧ್ವನಿ ಎತ್ತುವಂತೆ, ಪ್ರತಿಭಟನೆ ಜೊತೆಗೆ ನಿಲ್ಲುವಂತೆ ಮನವಿ ಮಾಡಿದ್ದರು.ಇದಕ್ಕೂ ಮೊದಲು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ದೂರವಾಣಿ ಮೂಲಕ ಮುಖ್ಯಮಂತ್ರಿಗಳ ಜೊತೆ ಇದೇ ವಿಚಾರಗಳ ಬಗ್ಗೆ ಚರ್ಚಿಸಿದ್ದರು. ತಮಿಳುನಾಡು ಸರ್ಕಾರದ ನಿಯೋಗ ಮತ್ತು ಮುಖ್ಯಮಂತ್ರಿ ಸ್ಟಾಲಿನ್ ಅವರ ಜೊತೆಗೆ ಚರ್ಚಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ತಮ್ಮದೂ ಬೆಂಬಲ ಸೂಚಿಸಿದ್ದರು.













































