ಹೈದರಾಬಾದ್: ಶಿಕ್ಷಣ, ಉದ್ಯೋಗ ಮತ್ತು ರಾಜಕೀಯಪ್ರಾತಿನಿಧ್ಯದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಶೇ 23ರಿಂದ 42ಕ್ಕೆ ಹೆಚ್ಚಿಸಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಸೋಮವಾರ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಈ ಕುರಿತಂತೆ ಪೋಸ್ಟ್ ಹಂಚಿಕೊಂಡಿರುವ ಅವರು, ರಾಜ್ಯದಲ್ಲಿ ನಡೆಸಿದ ಜಾತಿ ಸಮೀಕ್ಷೆಯ ಆಧಾರದ ಮೇಲೆ ಹಿಂದುಳಿದ ವರ್ಗಗಳ ಜನಸಂಖ್ಯೆ ಶೇ 56.36ರಷ್ಟಿದೆ ಎಂದು ಹೇಳಿದ್ದಾರೆ.’ಭಾರತೀಯ ಸ್ವಾತಂತ್ರ್ಯದ ನಂತರ ಹಿಂದುಳಿದ ಜಾತಿಗಳಿಗೆ ಸೇರಿದ ನಮ್ಮ ಸಹೋದರ, ಸಹೋದರಿಯರ ಹಂಬಲವು ಅಧಿಕೃತ ಜನಗಣತಿಯ ಬಳಿಕ ಈಡೇರುತ್ತಿದೆ ಎಂದು ಘೋಷಿಸಲು ನನಗೆ ಅತ್ಯಂತ ಹೆಮ್ಮೆ ಎನಿಸುತ್ತಿದೆ’ ಎಂದು ಅವರು ಹೇಳಿದ್ದಾರೆ.ಶಿಕ್ಷಣ, ಉದ್ಯೋಗಗಳು ಮತ್ತು ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ 42ರಷ್ಟು ಕೋಟಾ ಒದಗಿಸಲು ಕಾಂಗ್ರೆಸ್ ಸರ್ಕಾರ ಎರಡು ಮಸೂದೆಗಳನ್ನು ಮಂಡಿಸಿದ ಹಿನ್ನೆಲೆಯಲ್ಲಿ ರೆಡ್ಡಿ ಈ ಹೇಳಿಕೆ ನೀಡಿದ್ದಾರೆ.
“ಶಿಕ್ಷಣ, ಉದ್ಯೋಗಗಳು ಮತ್ತು ರಾಜಕೀಯ ಪ್ರಾತಿನಿಧ್ಯದ ಎಲ್ಲ ಹಂತಗಳಲ್ಲಿ ಈ ವರ್ಗಕ್ಕೆ ಶೇ 42ರಷ್ಟು ಮೀಸಲಾತಿಯನ್ನು ಖಚಿತಪಡಿಸಲು ನಾವು ಸಂಕಲ್ಪ ಮಾಡಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.2023ರ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್, ಹಿಂದುಳಿದ ವರ್ಗಗಳ ಮೀಸಲಾತಿ ಹೆಚ್ಚಿಸುವ ಘೋಷಣೆ ಮಾಡಿತ್ತು. ಸ್ಥಳೀಯ ಸಂಸ್ಥೆಗಳಲ್ಲಿ ಕೋಟಾವನ್ನು ಶೇ 23ರಿಂದ 42ಕ್ಕೆ ಹೆಚ್ಚಿಸುವುದಾಗಿ ಭರವಸೆ ನೀಡಿತ್ತು, ಜೊತೆಗೆ, ಸರ್ಕಾರಿ ಗುತ್ತಿಗೆ ಮತ್ತು ನಿರ್ವಹಣಾ ಗುತ್ತಿಗೆಗಳಲ್ಲಿ ಶೇ 42ರಷ್ಟು ಮೀಸಲಾತಿ ನೀಡುವುದಾಗಿ ಭರವಸೆ ನೀಡಿತ್ತು.













































