ಬೆಂಗಳೂರು: ರಾಜ್ಯ ಶಿಕ್ಷಣ ನೀತಿ ಆಯೋಗದ ಶಿಫಾರಸಿನಆಧಾರದಲ್ಲಿ ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸುವ ಕುರಿತು ನಿರ್ಧರಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಒಂದನೇ ತರಗತಿ ಪ್ರವೇಶಕ್ಕೆ 2025-26ನೇ ಸಾಲಿನಿಂದ ಆರು ವರ್ಷ ಕಡ್ಡಾಯಗೊಳಿಸಲಾಗಿದೆ. ವಯೋಮಿತಿ ಸಡಿಲಿಸುವಂತೆ ಹಲವು ಪೋಷಕರು ಮನವಿ ಮಾಡಿದ್ದಾರೆ. ರಾಜ್ಯ ಶಿಕ್ಷಣ ನೀತಿ ಆಯೋಗ ವರದಿ ನೀಡಿದ ನಂತರ ಮುಖ್ಯಮಂತ್ರಿ ಜತೆ ಚರ್ಚಿಸಿ, ಖಚಿತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.ಹಿಂದಿನ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ) ಭಾಗವಾಗಿ ಶಾಲಾ ಪ್ರವೇಶದ ವಯೋಮಿತಿಯನ್ನು ಆರು ವರ್ಷಕ್ಕೆ ನಿಗದಿ ಮಾಡಿತ್ತು. ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಎನ್ಇಪಿ ರದ್ದು ಮಾಡಲು ಕ್ರಮ ಕೈಗೊಂಡಿದೆ. ರಾಜ್ಯ ಶಿಕ್ಷಣ ನೀತಿ (ಎಸ್ಇಪಿ) ರೂಪಿಸಲು ಆಯೋಗ ರಚಿಸಿದೆ. ಪೋಷಕರ ವಿನಂತಿಯನ್ನು ಆಯೋಗದ ಗಮನಕ್ಕೂ ತರಲಾಗಿದೆ ಎಂದು ಹೇಳಿದರು.ಶಾಲಾ ಶಿಕ್ಷಣ ಇಲಾಖೆ 2022ರ ನವೆಂಬರ್ನಲ್ಲಿ ಹೊರಡಿಸಿದ ಆದೇಶದ ಪ್ರಕಾರ, ಜೂನ್ 1, 2025ರ ಒಳಗೆ ಆರು ವರ್ಷಗಳನ್ನು ಪೂರ್ಣಗೊಳಿಸಿದ ಮಕ್ಕಳು 2025-26 ಶೈಕ್ಷಣಿಕ ವರ್ಷಕ್ಕೆ ಒಂದನೇ ತರಗತಿಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ.













































