ಬೆಂಗಳೂರು: ರಾಜ್ಯದ ಕಲಬುರಗಿ, ವಿಜಯಪುರ, ಯಾದಗಿರಿ,ಬೀದರ್, ಹಾವೇರಿ, ಗದಗ, ಬೆಳಗಾವಿ, ಕೊಪ್ಪಳ ಜಿಲ್ಲೆಗಳಲ್ಲಿ ಏಪ್ರಿಲ್ 2 ರಂದು ಭಾರಿ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.
ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಜೋರು ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ಮಾಹಿತಿ ನೀಡಿದ್ದು, ಈ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಕೆಲವೆಡೆ ಮಂಗಳವಾರ ಸಾಧಾರಣ ಮಳೆಯಾಗಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ನಗರದಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ತಿಳಿಸಿದೆ.













































