ಬಿ.ವೈ.ವಿಜಯೇಂದ್ರ ಮುಂದುವರಿಕೆ?, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅಧಿಕಾರಾವಧಿಯೂ ಮುಕ್ತಾಯ
ಹೊಸದಿಲ್ಲಿ: ಕರ್ನಾಟಕದಲ್ಲಿ ಬಿಜೆಪಿ ರಾಜ್ಯ ಘಟಕದಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರು ಮುಂದುವರಿಯುತ್ತಾರೆಯೇ ಅಥವಾ ಹೊಸ ಅಧ್ಯಕ್ಷರ ನೇಮಕ ಆಗಲಿದೆಯೇ ಎಂಬ ಪ್ರಶ್ನೆಗೆ ಇನ್ನೊಂದು ವಾರದಲ್ಲಿ ಉತ್ತರ ದೊರೆಯಲಿದೆ. ಜತೆಗೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿಯೂ ಮುಕ್ತಾಯವಾಗಿರುವುದರಿಂದ ಈ ಮಾಸಾಂತ್ಯದೊಳಗೆ ಹೊಸ ಅಧ್ಯಕ್ಷರ ನೇಮಕಕ್ಕೆ ಪಕ್ಷ ಮುಂದಾಗಿದೆ.ಇದಕ್ಕೆ ಮುನ್ನ ವಿವಿಧ ರಾಜ್ಯ ಘಟಕಗಳ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ಬಿಜೆಪಿಯ ವರಿಷ್ಠರು ಇನ್ನೊಂದು ವಾರದಲ್ಲಿ ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಲ ರಾಜ್ಯಗಳ ಬಿಜೆಪಿ ಅಧ್ಯಕ್ಷರನ್ನು ಘೋಷಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ 13 ರಾಜ್ಯಗಳಲ್ಲಿ ಸಾಂಸ್ಥಿಕ ಚುನಾವಣೆ ನಡೆಸಿ ಅಲ್ಲಿಯ ರಾಜ್ಯಾಧ್ಯಕ್ಷರನ್ನು ಘೋಷಿಸಲಾಗಿದೆ.
ಅಣ್ಣಾಮಲೈ ಸ್ಥಾನಕ್ಕೆ ಕುತ್ತು:
ಈಗ ಬಾಕಿ 19 ರಾಜ್ಯಗಳಿಗೆ ಅಧ್ಯಕ್ಷರ ನೇಮಕಕ್ಕೆ ಬಿಜೆಪಿ ವರಿಷ್ಠರು ಮುಂದಾಗಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಹಾಲಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನೇ ಮುಂದುವರಿಸಲಾಗುವುದೇ ಅಥವಾ ನೂತನ ಅಧ್ಯಕ್ಷರನ್ನು ನೇಮಿಸಲಾಗುವುದೇ ಎಂಬ ಕುತೂಹಲ ಇದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಶೀಘ್ರ ರಾಜೀನಾಮೆ ನೀಡುತ್ತಾರೆ ಎಂದು ಮೂಲಗಳು ತಿಳಿಸಿದ್ದು, ಎಐಡಿಎಂಕೆ ಜತೆಗೆ ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಿರುವುದರಿಂದ ಅಣ್ಣಾಮಲೈ ಸ್ಥಾನಕ್ಕೆ ಕುತ್ತು ಎದುರಾಗಿದೆ ಎನ್ನಲಾಗಿದೆ.
ನಡ್ಡಾ ಕಥೆ ಏನು?
ಜೆ.ಪಿ. ನಡ್ಡಾ 2019ರಲ್ಲಿ ಪಕ್ಷದ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. 2020ರ ಜನವರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಲೋಕಸಭಾ ಚುನಾವಣೆ ಇದ್ದುದರಿಂದ ಅವರ ಅಧಿಕಾರಾವಧಿಯನ್ನು 2024ರ ಜೂನ್ವರೆಗೆ ವಿಸ್ತರಿಸಲಾಗಿತ್ತು. ಆದರೆ ಹಲವು ಕಾರಣಗಳಿಂದ ಹೊಸ ಅಧ್ಯಕ್ಷರ ನೇಮಕಾತಿ ನಡೆದಿರಲಿಲ್ಲ. ಈಗ ಈ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ.













































