ರಾಷ್ಟ್ರದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಮನವಮಿಯ ಶುಭಾಶಯ ಕೋರಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ನವದೆಹಲಿ: ಇಂದು ದೇಶಾದ್ಯಂತ ಶ್ರೀರಾಮ ನವಮಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ವಿವಿಧ ದೇವಸ್ಥಾನಗಳಲ್ಲಿ ಬೆಳಗ್ಗೆಯೇ ಶ್ರೀರಾಮನನ್ನು ವಿವಿಧ ಹೂಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ರಾಮನವಮಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಶುಭಾಶಯ ತಿಳಿಸಿರುವ ಮೋದಿ, “ಪ್ರಭು ಶ್ರೀರಾಮನ ಆಶೀರ್ವಾದ ಸದಾ ನಮ್ಮ ಮೇಲೆ ಇರಲಿ. ನಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಮಗೆ ಮಾರ್ಗದರ್ಶನ ನೀಡಲಿ” ಎಂದು ಹಾರೈಸಿದ್ದಾರೆ. ಜೊತೆಗೆ, “ಇಂದು ಮಧ್ಯಾಹ್ನ ರಾಮೇಶ್ವರಕ್ಕೆ ಭೇಟಿ ನೀಡುವುದನ್ನು ಎದುರು ನೋಡುತ್ತಿದ್ದೇನೆ” ಎಂದು ತಮಿಳುನಾಡು ಪ್ರವಾಸದ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದಾರೆ.
ಪ್ರಧಾನಿಯವರು ಇಂದು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ರಾಮೇಶ್ವರಂನಲ್ಲಿ ನಿರ್ಮಾಣವಾಗಿರುವ ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯಾದ ‘ಪಂಬನ್ ರೈಲು ಸೇತುವೆ’ಯನ್ನು ಉದ್ಘಾಟನೆ ಮಾಡಲಿದ್ದಾರೆ. ಮತ್ತು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗನ್ನು ಉದ್ಘಾಟಿಸಲಿದ್ದಾರೆ ಮತ್ತು ಸೇತುವೆಯ ಕಾರ್ಯಾಚರಣೆಯನ್ನು ವೀಕ್ಷಿಸಲಿದ್ದಾರೆ. ನಂತರ ಮಧ್ಯಾಹ್ನ 12:45ರ ಸುಮಾರಿಗೆ ಅವರು ರಾಮೇಶ್ವರಂನಲ್ಲಿರುವ ರಾಮನಾಥಸ್ವಾಮಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ.
ಮಧ್ಯಾಹ್ನ 1:30ರ ಸುಮಾರಿಗೆ ರಾಮೇಶ್ವರಂನಲ್ಲಿ 8,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ರೈಲು ಮತ್ತು ರಸ್ತೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.













































