ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಮತ್ತು ಬೆಲೆ ಏರಿಕೆ ವಿಪರೀತವಾಗಿದೆ ಎಂದು ಆರೋಪಿಸಿ ಬಿಜೆಪಿ ಆಯೋಜಿಸಿರುವ 16 ದಿನಗಳ ಜನಾಕ್ರೋಶ ಯಾತ್ರೆಯು ಸೋಮವಾರ ಮೈಸೂರಿನಲ್ಲಿ ಆರಂಭವಾಗಲಿದೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ‘ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಅವರು ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಒಟ್ಟು ನಾಲ್ಕು ಹಂತಗಳಲ್ಲಿ ಯಾತ್ರೆ ನಡೆಯಲಿದೆ. ಏಪ್ರಿಲ್ 7ರಿಂದ 10ರವರೆಗೆ ಮೊದಲ ಹಂತದಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಕೊಡಗು, ಮಂಗಳೂರು, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯಾತ್ರೆ ನಡೆಯಲಿದೆ’ ಎಂದರು.’ಏಪ್ರಿಲ್ 13ರಿಂದ 18ರವರೆಗೆ ಎರಡನೇ ಹಂತದಲ್ಲಿ ಶಿವಮೊಗ್ಗ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಹುಬ್ಬಳ್ಳಿಯಲ್ಲಿ ಯಾತ್ರೆ ನಡೆಯಲಿದೆ’ ಎಂದು ಮಾಹಿತಿ ನೀಡಿದರು.’ಏಪ್ರಿಲ್ 21ರಿಂದ 24ರವರೆಗೆ ಮೂರನೇ ಹಂತದಲ್ಲಿ ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ, ಕೊಪ್ಪಳ, ಗದಗ, ಹಾವೇರಿ, ದಾವಣಗೆರೆ ಹಾಗೂ ಏಪ್ರಿಲ್ 27ರಿಂದ ಮೇ 3ರವರೆಗೆ ನಾಲ್ಕನೇ ಹಂತದಲ್ಲಿ ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಯಾತ್ರೆ ಸಾಗಲಿದೆ’ ಎಂದು ವಿವರಿಸಿದರು.













































