ಮಂಡ್ಯ: ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿರುವುದೇ ಪಹಲ್ಗಾಮ್ ಘಟನೆ ಕಾರಣ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesh Bandisiddegowda) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ಪಹಲ್ಗಾಮ್ನಲ್ಲಿ (Pahalgam) ನಡೆದ ಉಗ್ರರ ದಾಳಿಯ ಕುರಿತು ಮಾತನಾಡಿದ ಅವರು, ಆರ್ಟಿಕಲ್ 370 ತೆಗೆಯೋದಕ್ಕೂ ಮೊದಲು ಯೋಚನೆ ಮಾಡಬೇಕಿತ್ತು. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರ ಅತಿಯಾದ ಆತ್ಮವಿಶ್ವಾಸದಿಂದ ಘಟನೆ ನಡೆದಿದೆ ಎನ್ನುವ ಮೂಲಕ ಘಟನೆಗೆ ಪರೋಕ್ಷವಾಗಿ ಬಿಜೆಪಿ ಕಾರಣ ಎಂದಿದ್ದಾರೆ.
ಆರ್ಟಿಕಲ್ 370 ತೆಗೆಯುವ ಮುನ್ನ ಕಾಶ್ಮೀರದಲ್ಲಿ (Kashmir) ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿತ್ತು. ಅವರ ದುಡುಕಿನ ನಿರ್ಧಾರದಿಂದ ಈ ಘಟನೆ ನಡೆದಿದೆ. ಜನರ ಭಾವನೆ ಅರ್ಥ ಮಾಡಿಕೊಂಡು ಆರ್ಟಿಕಲ್ 370 ತೆಗೆಯಬೇಕಿತ್ತು ಎಂದು ಕಿಡಿಕಾರಿದ್ದಾರೆ.
ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತರಲ್ಲಿ ಮೂವರು ಕನ್ನಡಿಗರಾಗಿದ್ದಾರೆ.













































