ಭಾರತೀಯ ಯೋಧರ ಕುಟುಂಬಕ್ಕೆ ಆಸ್ತಿ ತೆರಿಗೆಯಲ್ಲಿ ವಿನಾಯಿತಿ ನೀಡಲು ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ವಿಜಯವಾಡ(ಆಂಧ್ರ ಪ್ರದೇಶ): ಪಹಲ್ಗಾಮ್ನಲ್ಲಿ ಉಗ್ರರ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯನ್ನು ಇಡೀ ದೇಶವೇ ಕೊಂಡಾಡುತ್ತಿದೆ. ಇದರ ನಡುವೆ, ಆಂಧ್ರಪ್ರದೇಶ ಸರ್ಕಾರ ಭಾರತೀಯ ಯೋಧರಿಗಾಗಿ ಮಹತ್ವದ ನಿರ್ಧಾರ ಕೈಗೊಂಡಿದೆ.ಭಾರತೀಯ ಸೇನಾ ಯೋಧರ ಕುಟುಂಬಗಳಿಗೆ ಆಸ್ತಿ ತೆರಿಗೆಯಲ್ಲಿ ವಿನಾಯಿ ನೀಡಲು ಸಿಎಂ ನಾರಾ ಚಂದ್ರಬಾಬು ನಾಯ್ಡು ಅವರ ನೇತೃತ್ವದ ರಾಜ್ಯ ಸರ್ಕಾರ ನಿರ್ಧರಿಸಿದ್ದಾಗಿ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ತಿಳಿಸಿದ್ದಾರೆ.ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯೊಳಗೆ ಬರುವ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆ ಸೇರಿದಂತೆ ಭಾರತೀಯ ರಕ್ಷಣಾ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸೈನಿಕರ ಕುಟುಂಬಗಳಿಗೆ ಆಸ್ತಿ ತೆರಿಗೆಯಲ್ಲಿ ವಿನಾಯಿತಿ ನೀಡಲಾಗುವುದು ಎಂದು ಅವರು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಯೋಧರಿಗೆ ಗೌರವ: ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೈನಿಕರಿಗೆ ಕೃತಜ್ಞತೆಯ ಸಂಕೇತವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಹಿಂದೆ ನಿವೃತ್ತ ಸೈನಿಕರು ಅಥವಾ ಗಡಿಗಳಲ್ಲಿ ನಿಯೋಜಿಸಲ್ಪಟ್ಟವರಿಗೆ ಸೀಮಿತವಾಗಿದ್ದ ವಿನಾಯಿತಿಯು ಈಗ ದೇಶಾದ್ಯಂತ ಸೇವೆ ಸಲ್ಲಿಸುತ್ತಿರುವ ಎಲ್ಲ ಮಾದರಿಯ ಯೋಧರಿಗೆ ಇದು ಅನ್ವಯಿಸುತ್ತದೆ ಎಂದು ತಿಳಿಸಿದ್ದಾರೆ.ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯತಿ ಮಿತಿಯೊಳಗಿನ ಭಾರತೀಯ ರಕ್ಷಣಾ ಪಡೆಗಳ ಸಿಬ್ಬಂದಿ ಅಥವಾ ಅವರ ಸಂಗಾತಿ ವಾಸಿಸುವ ಪ್ರತ್ಯೇಕ ಅಥವಾ ಜಂಟಿಯಾಗಿ ಹೊಂದಿರುವ ಆಸ್ತಿಯೂ ಈ ತೆರಿಗೆ ವಿನಾಯಿತಿಗೆ ಅರ್ಹವಾಗಿರುತ್ತದೆ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.













































