ಜಾತಿಗಣತಿ ವರದಿ ಬಗ್ಗೆ ಕೆಲಸ ಸಚಿವರು ಉತ್ತರ ನೀಡಬೇಕಿರುವ ಕಾರಣ, ಇದರ ಕುರಿತ ಚರ್ಚೆಯನ್ನು ಮುಂದೂಡಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.
ಬೆಂಗಳೂರು: “ಜಾತಿಗಣತಿ ಬಗ್ಗೆ ಚರ್ಚೆ ಅಪೂರ್ಣವಾಗಿದೆ. ಬಹುತೇಕ ಸಚಿವರು ಲಿಖಿತ ಅಭಿಪ್ರಾಯ ನೀಡಿದ್ದಾರೆ. ಕೆಲವರು ಕೊಡಬೇಕಿದೆ. ಈ ಬಗ್ಗೆ ಚರ್ಚೆಯಾದ ಮೇಲೆ ತೀರ್ಮಾನ ಮಾಡುತ್ತೇವೆ” ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.ಇಂದು ಸಚಿವ ಸಂಪುಟ ಸಭೆಯ ನಂತರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, “ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ ದತ್ತಾಂಶಗಳ ಅಧ್ಯಯನ ವರದಿ-2024ರಲ್ಲಿ ಮಾಡಿರುವ ಶಿಫಾರಸುಗಳ ಬಗ್ಗೆ ಇನ್ನೂ ಕೆಲ ಸಚಿವರು ಉತ್ತರ ನೀಡಬೇಕಿದೆ. ಹಾಗಾಗಿ, ಇದರ ಚರ್ಚೆಯನ್ನು ಮುಂದೂಡಲಾಗಿದೆ” ಎಂದು ಹೇಳಿದರು.ಕೆಪಿಎಸ್ಸಿ 2011ರ ನೇಮಕಾತಿಯಲ್ಲಿ ಅಕ್ರಮ ವಿಚಾರ ಕುರಿತು ಮಾತನಾಡಿ, “ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಚರ್ಚೆಯಾಗಿದ್ದು ಅಂದಿನ ಅಧ್ಯಕ್ಷರು, ಸದಸ್ಯರ ವಿರುದ್ದ ಪ್ರಾಸಿಕ್ಯೂಷನ್ಗೆ ಒಪ್ಪಿಸದಿರಲು ತೀರ್ಮಾನ ಮಾಡಲಾಗಿದೆ. ಈ ವಿಷಯವನ್ನು ಮುಕ್ತಾಯಗೊಳಿಸಲು ಸಚಿವ ಸಂಪುಟ ತೀರ್ಮಾನಿಸಿದೆ” ಎಂದು ಹೇಳಿದರು.
“ವಿಧಾನಸಭೆ ಅಧಿವೇಶನದಲ್ಲಿ ಅಮಾನತುಗೊಂಡ ಬಿಜೆಪಿ ಶಾಸಕರ ಬಗ್ಗೆ ಚರ್ಚೆ ನಡೆಯಿತು. ಮುಖ್ಯಮಂತ್ರಿಗಳು ಈ ವಿಷಯ ಪ್ರಸ್ತಾಪಿಸಿದ್ರು. ಈ ವಿಚಾರದಲ್ಲಿ ಸಭಾಧ್ಯಕ್ಷರ ಜೊತೆ ಚರ್ಚೆ ಮಾಡಲು ಸಿಎಂಗೆ ಅಧಿಕಾರ ನೀಡಲಾಗಿದೆ. ಮೇ 25ರ ಸಂಜೆ 5 ಗಂಟೆಗೆ ಸಭೆ ನಡೆಸಲು ತೀರ್ಮಾನ ಮಾಡಲಾಗಿದ್ದು ಸಭಾಧ್ಯಕ್ಷರು, ಸಿಎಂ ಹಾಗೂ ಪ್ರತಿಪಕ್ಷದ ನಾಯಕರು ನನ್ನ ಜೊತೆ ಮಾತನಾಡಿದ್ದಾರೆ. ಈ ಸಂಬಂಧ ಸದನ ಸಲಹಾ ಸಭೆ ನಡೆಸಲು ತೀರ್ಮಾನವಾಗಿದ್ದು, ಸಭಾಧ್ಯಕ್ಷರು ಸೂಚಿಸುವ ಸದಸ್ಯರ ಜೊತೆ ಸಭೆ ನಡೆಯಲಿದೆ” ಎಂದು ತಿಳಿಸಿದರು.
ಸಚಿವ ಸಂಪುಟ ಸಭೆಯ ಇತರ ನಿರ್ಣಯಗಳು:
ಬೆಂಗಳೂರು ಮೆಟ್ರೋ ರೈಲು ಹಂತ-2 ಯೋಜನೆಯ 40,425.02 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಲಾಗಿದೆ. ಭರತ್ ಲಾಲ್ ಮೀನಾ, ನಿವೃತ್ತ ಐಎಎಸ್ ಅಧಿಕಾರಿ, ಅಂದಿನ ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮತ್ತು ಪಿ.ಬಿ.ರಾಮಮೂರ್ತಿ, ನಿವೃತ್ತ ಐಎಎಸ್ ಅಧಿಕಾರಿ, ಅಂದಿನ ಅಧ್ಯಕ್ಷರು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇವರುಗಳ ವಿರುದ್ಧ ಲೋಕಾಯುಕ್ತರು, ಕರ್ನಾಟಕ ಲೋಕಾಯುಕ್ತ ಕಾಯ್ದೆ, 1984ರ ಕಲಂ 12(3)ರಡಿ ಇಲಾಖಾ ವಿಚಾರಣೆಗೆ ವಹಿಸಲು ಮಾಡಿರುವ ಶಿಫಾರಸುನ್ನು ಕೈಬಿಡುವ ಬಗ್ಗೆ ತೀರ್ಮಾನ.ಅನಿಲ್ ಕುಮಾರ್ ವೈ.ಡಿ. ಸಹಾಯಕ ಇಂಜಿನಿಯರ್ ಮತ್ತು ಮಹಾದೇವ ಬಿ.ಕೆ., ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಕಾವೇರಿ ನೀರಾವರಿ ನಿಗಮ ಇವರುಗಳ ವಿರುದ್ಧ ಉಪ ಲೋಕಾಯುಕ್ತರು ಕರ್ನಾಟಕ ಲೋಕಾಯುಕ್ತ ಕಾಯ್ದೆ, 1984ರ ಕಲಂ 12(3)ರಡಿ ಇಲಾಖಾ ವಿಚಾರಣೆಗೆ ವಹಿಸಲು ಮಾಡಿರುವ ಶಿಫಾರಸುನ್ನು ಕೈಬಿಡುವ ಬಗ್ಗೆ ತೀರ್ಮಾನ ಮಾಡಲಾಗಿದೆ.
“ಕರ್ನಾಟಕ ವೈದ್ಯಕೀಯ ಕೋರ್ಸ್ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕ, 2025” ಅನುಮೋದನೆ. ಕರ್ನಾಟಕ ಗೃಹ ಮಂಡಳಿಯು ಬೆಂಗಳೂರು ನಗರ, ಕೆಂಗೇರಿ ಬಂಡೇಮಠ ಬಡಾವಣೆಯಲ್ಲಿ ಬಹುಮಹಡಿ ವಸತಿ ಸಮುಚ್ಚಯಗಳನ್ನು ನಿರ್ಮಿಸುವ ಅಂದಾಜು 2,180 ಮೊತ್ತದ ಕೋಟಿಗಳ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಮತ್ತು ನಂದಗುಡಿ ಹೋಬಳಿಗಳ 59 ಕೆರೆಗಳಿಗೆ ಹೆಚ್.ಎನ್.ವ್ಯಾಲಿ ಯೋಜನೆಯಿಂದ (ಹೆಚ್ಚುವರಿ ವಿಸ್ತರಣೆ ಮೂಲಕ) ಸಂಸ್ಕರಿಸಿದ ತ್ಯಾಜ್ಯ ನೀರನ್ನು ಏತ ನೀರಾವರಿ ಮೊಲಕ ತುಂಬಿಸುವ 140 ಕೋಟಿ ರೂ.ಗಳ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ತುಮಕೂರು ಜಿಲ್ಲೆ, ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿ ಮುದ್ದೇನಹಳ್ಳಿ ಶಾನಗಾನಹಳ್ಳಿ ನಡುವೆ ಜಯಮಂಗಲಿ ನದಿಗೆ ಅಡ್ಡಲಾಗಿ ಚೆಕ್ಡ್ಯಾಂ ಕಂ ಬ್ರಿಡ್ಜ್ ನಿರ್ಮಾಣ ಕಾಮಗಾರಿಯನ್ನು 18.50 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.ಕೋಲಾರ ಜಿಲ್ಲೆಯ ಮಾಲೂರು 25 ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ತೀರ್ಮಾನ. ಮಂಡ್ಯ ಜಿಲ್ಲೆಯ ಮದ್ದೂರು ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ ದೊರೆತಿದೆ.ಮೈಸೂರು ಜಿಲ್ಲೆ, ಟಿ.ನರಸೀಪುರ ತಾಲ್ಲೂಕಿನ ರಾಜಪರಮೇಶ್ವರಿ ನಾಲೆ ಮತ್ತು ಹಾರೋಹಳ್ಳಿ ಮೇಲ್ದಂಡೆ ನಾಲೆಯಡಿಯಲ್ಲಿ ಬರುವ ಉದ್ದೀನಾಲೆ ಮತ್ತು ಮೈನರ್ಳಿಗೆ ಆರ್ಸಿಸಿ ಟ್ರಫ್ ನಿರ್ಮಾಣ ಮತ್ತು ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ರೂ. 45 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಮೈಸೂರು ಜಿಲ್ಲೆ, ಟಿ.ನರಸೀಪುರ ತಾಲ್ಲೂಕಿನ 25 ವ್ಯಾಪ್ತಿಯಲ್ಲಿ ವಿರಿಜಾ ಅಣೆಕಟ್ಟು ನಾಲೆಯ ಹಾರೋಹಳ್ಳಿ ಪಿಕಪ್ ನಾಲೆ ಹಾಗೂ ರಾಜಪರಮೇಶ್ವರಿ ನಾಲೆಯ ಬಂಡಿಬಚ್ಚಲು ಶಾಖಾ ನಾಲೆಯ ಆಧುನೀಕರಣ ಕಾಮಗಾರಿಯನ್ನು 45 ಕೋಟಿ ರೂ.ಗಳ ಅಂದಾಜು ಮೊತದಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ. ಮೈಸೂರು ಜಿಲ್ಲೆ, ಟಿ.ನರಸೀಪುರ ತಾಲ್ಲೂಕಿನ ಬನ್ನೂರು ಪಟ್ಟಣ ಬಳಿ ಕಾವೇರಿ ನದಿಯಿಂದ ನೀರೆತ್ತಿ ಹಾರೋಹಳ್ಳಿ ಮೇಲ್ಮಟ್ಟದ ನಾಲೆ ಹಾಗೂ ಕೆಳಮಟ್ಟದ ನಾಲೆಯ ಅಚ್ಚುಕಟ್ಟು ಪ್ರದೇಶಕ್ಕೆ ನೀರೊದಗಿಸುವ ಕಾಮಗಾರಿಯನ್ನು 49.50 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ.ಮೈಸೂರು ಜಿಲ್ಲೆ, ಮೈಸೂರು ತಾಲ್ಲೂಕಿನ ಚಿಕ್ಕಂಕನಹಳ್ಳಿ ಕೆರೆಯ ಮೆಗ್ಗಾಲುವೆ ಮತ್ತು ಕಿಗ್ಗಾಲುವೆಗಳ ಆಧುನೀಕರಣ ಕಾಮಗಾರಿಯನ್ನು 34.65 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ರಾಮನಗರ ಜಿಲ್ಲೆ, ಕನಕಪುರ ನಗರ ವ್ಯಾಪ್ತಿಯಲ್ಲಿನ ಅರ್ಕಾವತಿ ನದಿ ದಂಡ ಅಭಿವೃದ್ಧಿ ಯೋಜನೆಯಡಿ ಅರ್ಕಾವತಿ ಜಲಾಶಯ ಯೋಜನೆಯ ಕಾಮಗಾರಿಯನ್ನು 120 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ದೊರೆತಿದೆ.












































