ಶಾಲೆಗಳಿಗೆ ಸದ್ಯಕ್ಕೆ ಕೋವಿಡ್ ಮಾರ್ಗಸೂಚಿ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಬೇಸಗೆ ರಜೆ ಬಳಿಕ ಶಾಲೆಗಳುಪ್ರಾರಂಭವಾಗುತ್ತಿದ್ದು ವಿದ್ಯಾರ್ಥಿಗಳಿಗೆ ಜ್ವರ, ಶೀತ, ಕೆಮ್ಮು ಇದ್ದರೆ ಶಾಲೆಗಳಿಗೆ ಕಳುಹಿಸಿಕೊಡಬಾರದು. ಒಂದು ವೇಳೆ ಶಾಲೆಯಲ್ಲಿ ಮಕ್ಕಳಿಗೆ ಶೀಘ್ರ ನೆಗಡಿ ಬಂದರೆ ಕೂಡಲೇ ಪೋಷಕರಿಗೆ ಕರೆ ಮಾಡಿ ಕಳುಹಿಸಿಕೊಡಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿದೆ. ಆದರೆ ಹೆಚ್ಚು ಆತಂಕಪಡುವ ಅಗತ್ಯವಿಲ್ಲ. ಗರ್ಭಿಣಿಯರು ಮಾಸ್ಕ್ ಬಳಕೆ ಮಾಡಬೇಕು. ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ. ಆದರೆ ನಮ್ಮ ವೈದ್ಯಕೀಯ ಕಾಲೇಜು, ಆಸ್ಪತ್ರೆಗಳ ಸಿಬಂದಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸಲಹೆ ನೀಡಿದ್ದೇವೆ ಎಂದರು.
ಶಾಲೆಗಳಿಗೆ ಸದ್ಯಕ್ಕೆ ಕೋವಿಡ್ ಮಾರ್ಗಸೂಚಿ ಇಲ್ಲ: ಶಿಕ್ಷಣ ಸಚಿವ ಮಧು
ರಾಜ್ಯದ ಶಾಲೆಗಳಿಗೆ ಸದ್ಯಕ್ಕೆ ಯಾವುದೇ ಕೋವಿಡ್ ಮಾರ್ಗಸೂಚಿ ಹೊರಡಿಸುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸುದ್ದಿಗಾರರಿಗೆ ತಿಳಿಸಿದರು.
ಮೇ 29ಕ್ಕೆ ಶಾಲೆಗಳು ಪ್ರಾರಂಭವಾಗುತ್ತಿವೆ. ಕೋವಿಡ್ ಕುರಿತು ಎಚ್ಚರಿಕೆ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆ ಮಾರ್ಗಸೂಚಿ ನೀಡಿದರೆ ಅದನ್ನು ಅನುಷ್ಠಾನಕ್ಕೆ ತರುತ್ತೇವೆ.ಆರೋಗ್ಯದಲ್ಲಿ ವ್ಯತ್ಯಾಸ ಇರುವ ಮಕ್ಕಳು ಶಾಲೆಗೆ ಬರುವುದು ಬೇಡ ಎಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನವಾಗಿದೆ ಎಂದರು.












































