ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಸ್ಲಿಂ ನಾಯಕರು ಇಂದು ಸಾಮೂಹಿಕ ರಾಜೀನಾಮೆ ಘೋಷಿಸಿದ್ದಾರೆ.
ಮಂಗಳೂರು (ದಕ್ಷಿಣ ಕನ್ನಡ) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಯನ್ನು ನಿಯಂತ್ರಿಸಲಾಗದ ಸರ್ಕಾರದ ವಿರುದ್ದ ಆಕ್ರೋಶಗೊಂಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಸ್ಲಿಂ ನಾಯಕರು ಗುರುವಾರ ಸಾಮೂಹಿಕ ರಾಜೀನಾಮೆ ಘೋಷಿಸಿದ್ದು, ಈ ವೇಳೆ ಭಾರಿ ಗದ್ದಲ ಉಂಟಾಯಿತು.ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆಯುತ್ತಿದ್ದರೂ ಇದನ್ನು ತಡೆಯಲು ಗೃಹ ಇಲಾಖೆ ವಿಫಲವಾಗಿರುವುದು ಮತ್ತು ದ್ವೇಷ ಪೂರಿತ ಭಾಷಣ ಮಾಡುವವರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮುಖಂಡರು ರಾಜೀನಾಮೆ ಘೋಷಣೆ ಮಾಡಿದರು.
ಈ ಹಿನ್ನೆಲೆಯಲ್ಲಿ ಮಂಗಳೂರಿನ ಶಾದಿ ಮಹಲ್ನಲ್ಲಿ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮುಖಂಡರುಗಳ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಎಸ್ ಮೊಹಮ್ಮದ್, ಮಾಜಿ ಮನಪಾ ವಿಪಕ್ಷ ನಾಯಕ ರವೂಫ್ ಸೇರಿದಂತೆ ಮುಸ್ಲಿಂ ಸಮುದಾಯದ, ಕಾಂಗ್ರೆಸ್ ಪಕ್ಷದ ಮುಖಂಡರು ರಾಜೀನಾಮೆ ಘೋಷಿಸಿದರು.ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ದ. ಕ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಅವರು, ‘ದ. ಕ ಜಿಲ್ಲೆಯ ಪಕ್ಷದ ಬೂತ್ ಮಟ್ಟದಿಂದ ಹಿಡಿದು ರಾಜ್ಯಮಟ್ಟದ ಪದಾಧಿಕಾರಿಗಳ ಸಭೆಯನ್ನು ಕರೆದು ಇಂದು ಸಾಮೂಹಿಕ ರಾಜೀನಾಮೆ ಘೋಷಿಸಿದ್ದೇವೆ. ಈ ಮಧ್ಯೆ ಮುಖ್ಯಮಂತ್ರಿ ಸೇರಿದಂತೆ ಹಲವು ಮುಖಂಡರು ಮಾತನಾಡಿದ್ದಾರೆ. ಪದಾಧಿಕಾರಿಗಳ ರಾಜೀನಾಮೆಯನ್ನು ಸಂಗ್ರಹಿಸಿ ಒಂದು ವಾರದೊಳಗೆ ಕೆಪಿಸಿಸಿಗೆ ತಲುಪಿಸುತ್ತೇವೆ. ಅಲ್ಲಿಯವರೆಗೆ ಜಿಲ್ಲೆಯ ಬೆಳವಣಿಗೆಯನ್ನು ಗಮನಿಸಲಾಗುವುದು’ ಎಂದರು.
ಭಾರಿ ಗದ್ದಲ : ಸಭೆಯಲ್ಲಿ ದ. ಕ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಅವರು ರಾಜೀನಾಮೆ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಅವರು ಇಂದು ನನ್ನ ಜೊತೆಗೆ ಮಾತನಾಡಿ ಒಂದು ವಾರದಲ್ಲಿ ಬದಲಾವಣೆ ತರುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದು ಹೇಳುತ್ತಿದ್ದಂತೆ, ಸಾಮೂಹಿಕ ರಾಜೀನಾಮೆ ನೀಡಲು ಬಂದ ಪದಾಧಿಕಾರಿಗಳು ಗದ್ದಲವೆಬ್ಬಿಸಿದರು. ರಾಜೀನಾಮೆ ಕೊಡಲೇಬೇಕು ಎಂದು ಸಭಾಂಗಣದ ಮುಂದೆ ಬಂದು ಅಕ್ರೋಶ ವ್ಯಕ್ತಪಡಿಸಿದರು. ನಾಯಕರು ನಾವು ರಾಜೀನಾಮೆ ನೀಡುತ್ತೇವೆ ಎಂದು ಪಟ್ಟು ಹಿಡಿದರು. ಕೊನೆಗೆ ಮುಖಂಡರುಗಳು ತಾವು ರಾಜೀನಾಮೆ ನೀಡುವುದಾಗಿ ಘೋಷಿಸಿ ಸಭೆಯಿಂದ ನಿರ್ಗಮಿಸಿದರು.












































