
ಮಂಗಳೂರು:ಗಡಿನಾಡುಕೇರಳದಕಾಸರಗೋಡುಜಿಲ್ಲೆಯನ್ನು ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹೆದ್ದಾರಿಯಲ್ಲಿ ಕನ್ನಡ ಮಾಯ ಆಗಿರುವುದನ್ನು ಭಾರತ ಸರ್ಕಾರದ ಭಾಷಾ ಅಲ್ಪಸಂಖ್ಯಾತ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಕೇರಳ ಸರ್ಕಾರಕ್ಕೆ ಪತ್ರ ಬರೆದಿದೆ. ಕೇರಳದ ಭಾಷಾ ಅಲ್ಪಸಂಖ್ಯಾತ ಇಲಾಖೆಯ ಕಾರ್ಯದರ್ಶಿಗೆ ಕೇಂದ್ರೀಯ ಇಲಾಖೆಯ ಸಹಾಯಕ ಕಮಿಷನರ್ ಶಿವಕುಮಾರ್ ಅವರು ಜೂನ್ 13ರಂದು ಪತ್ರ ಬರೆದಿದ್ದಾರೆ. ಪತ್ರದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನೂ ಅಳವಡಿಸುವಂತೆ ತಾಕೀತು ಮಾಡಿದ್ದಾರೆ. ಗಡಿನಾಡಿನಲ್ಲಿ ಭಾಷಾ ಅಲ್ಪಸಂಖ್ಯಾತ ನೀತಿ ಪಾಲಿಸುವಂತೆ ಕೋರಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಕೇರಳದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ತಿರುವನಂತಪುರಂನ ಅಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿತ್ತು.













































