ಶಿವಮೊಗ್ಗ: ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರ ಆರೋಪಎದುರಿಸುತ್ತಿರುವ ವಸತಿ ಸಚಿವರು ರಾಜೀನಾಮೆ ನೀಡಬೇಕೆಂದು ಸಾಗರ ಶಾಸಕರು ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆಗ್ರಹಿಸಿದ್ದಾರೆ.
ನಗರದಲ್ಲಿಂದು ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಸತಿ ಸಚಿವರ ವಿರುದ್ಧ ಮನೆ ಹಂಚಿಕೆ ವಿಚಾರದಲ್ಲಿ ಹಣ ಕೇಳಿದ್ದಾರೆಂಬ ಆರೋಪ ಕೇಳಿ ಬಂದಿದೆ. ಇದರಿಂದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ತಕ್ಷಣ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ತನಿಖೆ ಎದುರಿಸಲಿ. ಅವರು ಭ್ರಷ್ಟಾಚಾರ ಮಾಡಿಲ್ಲ ಎಂದು ಸಾಬೀತಾದರೆ ಮತ್ತೆ ತಮ್ಮ ಮಂತ್ರಿ ಸ್ಥಾನಕ್ಕೆ ಬರಲಿ ಎಂದರು.
ಈ ಹಿಂದೆ ಅನೇಕ ಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಾಗ ಅವರು ರಾಜೀನಾಮೆ ನೀಡಿದ್ದ ಉದಾಹರಣೆಗಳಿವೆ. ಇದರಿಂದ ವಸತಿ ಸಚಿವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎನ್ನುವ ಮೂಲಕ ಸ್ವಪಕ್ಷದವರೇ ವಸತಿ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.













































