
ಬೆಂಗಳೂರು: ಪ್ರಧಾನಿ ಇಂದಿರಾ ಗಾಂಧಿಯವರು 1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದರು. ಕೇವಲ ತಮ್ಮ ಅಧಿಕಾರಕ್ಕಾಗಿ ನಮ್ಮ ಪವಿತ್ರ ಸಂವಿಧಾನವನ್ನೇ ಆಗ ಬಲಿ ಕೊಡಲಾಗಿತ್ತು ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದರು.
“ಸಿಟಿಜನ್ ಫಾರ್ ಸೋಷಿಯಲ್ ಜಸ್ಟೀಸ್ ಬೆಂಗಳೂರು” ವತಿಯಿಂದ ಇಂದು ಟೌನ್ ಹಾಲ್ ನಲ್ಲಿ “1975ರ ತುರ್ತು ಪರಿಸ್ಥಿತಿ 50ನೇ ವರ್ಷ-ಕರಾಳ ದಿನಗಳು” ಎನ್ನುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಗ ಪ್ರಜೆಗಳ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಲಾಗಿತ್ತು ಎಂದರು. ತಮ್ಮ ನಿರಂಕುಶ ಅಧಿಕಾರಕ್ಕಾಗಿ ಸ್ವಾತಂತ್ರ್ಯದ ಧ್ವನಿಗಳ ಕೊರಳನ್ನು ಹಿಸುಕಿ ಪತ್ರಿಕಾ ಸ್ವಾತಂತ್ರ್ಯ, ನ್ಯಾಯಾಂಗದ ಸ್ವಾಯತ್ತತೆ, ಸಾರ್ವಜನಿಕ ಹಕ್ಕುಗಳನ್ನು ಕಸಿದುಕೊಳ್ಳಲಾಗಿತ್ತು ಎಂದು ತಿಳಿಸಿದರು.
ದೇಶದ ಜನರ ಎಲ್ಲ ಸ್ವಾತಂತ್ರ್ಯ ಕಿತ್ತುಕೊಳ್ಳಲಾಗಿತ್ತು:
ವಾಕ್ ಸ್ವಾತಂತ್ರ್ಯ, ರಾಜಕೀಯ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಯಿತು. ಪತ್ರಿಕಾ ಸ್ವಾತಂತ್ರ್ಯಕ್ಕೆ ಸಂಪೂರ್ಣ ಅಂಕುಶ ಹಾಕಲಾಗಿತ್ತು. ಪ್ರಜಾಪ್ರಭುತ್ವದ ಕತ್ತು ಹಿಸುಕಿ ಅಟ್ಟಹಾಸ ಮೆರೆಯಲಾಯಿತು. ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ ಪಕ್ಷವು ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಅಧಿಕಾರಕ್ಕಾಗಿ ಹೀಗೆ ಮಾಡಿತ್ತು. ಇದು ನಿಜವಲ್ಲದಿದ್ದರೆ, ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ನೀಡಿದ ಶ್ರೇಷ್ಠ ಸಂವಿಧಾನದ ಆಶೋತ್ತರಗಳ ಕತ್ತು ಹಿಸುಕಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರುವ ಪ್ರಮಾದವನ್ನು ಕಾಂಗ್ರೆಸ್ ಮಾಡುತ್ತಿರಲಿಲ್ಲ ಎಂದರು.ಆಗ ಕೇವಲ ಇಬ್ಬರು ಬಿಜೆಪಿ ಸಂಸದರು ಇದ್ದರು:
ನಂತರದ ದಿನಗಳಲ್ಲಿ ರಾಜೀವ್ ಗಾಂಧಿಯವರು 415 ಸಂಸದರೊಂದಿಗೆ ಅಧಿಕಾರಕ್ಕೆ ಬಂದಿದ್ದರು. ಬಿಜೆಪಿ ಕೇವಲ ಇಬ್ಬರು ಸಂಸದರನ್ನು ಹೊಂದಿತ್ತು. ಬಿಜೆಪಿ ಮೃತಪಟ್ಟಿದ್ದು, ಅದನ್ನು ಒಯ್ಯಲು 4 ಜನ ಬೇಕಿದೆ. ಆದರೆ, ಇಬ್ಬರೇ ಇದ್ದಾರೆ ಎಂದು ವ್ಯಂಗ್ಯವಾಡಿದ್ದರು. ಅಗತ್ಯವಿದ್ದರೆ ಮತ್ತೆ ತುರ್ತು ಪರಿಸ್ಥಿತಿ ಹೇರಲು ಸಿದ್ಧವೆಂದು ರಾಜೀವ್ ಗಾಂಧಿಯವರು ಹೇಳಿದ್ದರೆಂದು ನೆನಪಿಸಿದರು.
ವಿಶ್ರಾಂತ ಕುಲಪತಿ ವಿಷ್ಣುಕಾಂತ್ ಚಟಪಲ್ಲಿ, ಕೇಂದ್ರ ಲಲಿತ ಕಲಾ ಅಕಾಡೆಮಿ ಮತ್ತು ರಾಜ್ಯ ಲಲಿತ ಕಲಾ ಅಕಾಡೆಮಿಗಳ ಮಾಜಿ ಅಧ್ಯಕ್ಷ ಮತ್ತು ಕಲಾವಿದ ಚಿ.ಸು. ಕೃಷ್ಣ ಶೆಟ್ಟಿ ಅವರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಯ ಪೈಶಾಚಿಕ ಘಟನಾವಳಿಗಳನ್ನು ನೆನಪಿಸಲಾಯಿತು. ಆರೆಸ್ಸೆಸ್ ಸ್ವಯಂಸೇವಕರು, ವಿವಿಧ ಪಕ್ಷಗಳ ಕಾರ್ಯಕರ್ತರು ಹೋರಾಟದಲ್ಲಿ ಭಾಗವಹಿಸಿದ್ದ ಕುರಿತ ಪ್ರದರ್ಶನ ಏರ್ಪಡಿಸಲಾಗಿತ್ತು.













































