
ನವದೆಹಲಿ: ‘ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆಯಬೇಕು’ ಎಂಬ ಆರ್ಎಸ್ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆಯನ್ನು ಆರ್ಎಸ್ಎಸ್ ಮುಖವಾಣಿ ‘ಆರ್ಗನೈಜರ್’ ಶುಕ್ರವಾರ ಸಮರ್ಥಿಸಿಕೊಂಡಿದೆ.’ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆಯಲ್ಲಿ ಸಂವಿಧಾನವನ್ನು ಬುಡಮೇಲು ಮಾಡುವ ಉದ್ದೇಶವಿಲ್ಲ. ಸಂವಿಧಾನದ ‘ಮೂಲ ಆಶಯ’ ಮರುಸ್ಥಾಪಿಸಬೇಕು ಹಾಗೂ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ನೀತಿಯ ಭಾಗವಾಗಿ ಮಾಡಿದ್ದ ‘ವಿರೂಪ’ಗಳಿಂದ ಸಂವಿಧಾನ ಮುಕ್ತವಾಗಿರಬೇಕು ಎಂಬ ಉದ್ದೇಶದಿಂದ ಈ ಮಾತು ಹೇಳಿದ್ದಾರೆ’ ಎಂದು ನಿಯತಕಾಲಿಕದಲ್ಲಿ ಪ್ರಕಟವಾಗಿರುವ ಲೇಖನದಲ್ಲಿ ಹೇಳಲಾಗಿದೆ.
ಸಂವಿಧಾನ ರಚನಾ ಸಭೆಯಲ್ಲಿ ನಡೆದ ಚರ್ಚೆಗಳ ಅಂಶಗಳನ್ನು ಉಲ್ಲೇಖಿಸಿರುವ ಪತ್ರಿಕೆ, ‘ಬಿ.ಆರ್.ಅಂಬೇಡ್ಕರ್ ಪ್ರತಿಪಾದಿಸಿರುವ ಪ್ರಜಾತಾಂತ್ರಿಕ ತತ್ವಗಳನ್ನು ಹೊಸಬಾಳೆ ಅವರ ಮಾತುಗಳು ಪ್ರತಿಧ್ವನಿಸುತ್ತವೆ’ ಎಂದಿದೆ.
‘ಭಾರತವನ್ನು ‘ಜಾತ್ಯತೀತ ಹಾಗೂ ಸಮಾಜವಾದಿ ರಾಜ್ಯಗಳ ಒಕ್ಕೂಟ’ವೆಂದು ಘೋಷಿಸಬೇಕು ಎಂಬ ಪ್ರಸ್ತಾವವನ್ನು ಸಂವಿಧಾನ ರಚನಾ ಸಭೆ 1948ರಲ್ಲಿ ತಿರಸ್ಕರಿಸಿತ್ತು’ ಎಂದು ಲೇಖನದಲ್ಲಿ ವಿವರಿಸಲಾಗಿದೆ.’ಕಾಂಗ್ರೆಸ್ ಸರ್ಕಾರ ತಂದ 42ನೇ ತಿದ್ದುಪಡಿ ರಾಜಕೀಯ ತಂತ್ರಗಾರಿಕೆಯಾಗಿತ್ತೇ ಹೊರತು, ಸಂವಿಧಾನ ರಚನಾ ಸಭೆಯ ಆಶಯವಾಗಿರಲಿಲ್ಲ. ಭಾರತದ ಭವಿಷ್ಯದ ಪೀಳಿಗೆಗಳನ್ನು ಸಶಕ್ತಗೊಳಿಸಬಲ್ಲ ಪ್ರಜಾಸತ್ತಾತ್ಮಕ ಚೌಕಟ್ಟು ಕುರಿತು ಅಂಬೇಡ್ಕರ್ ಹೊಂದಿದ್ದ ದೂರದೃಷ್ಟಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಎಂಬುದು ಹೊಸಬಾಳೆ ಅವರ ಉದ್ದೇಶವಾಗಿದೆ. ಈ ವಿಚಾರವಾಗಿ ಮುಕ್ತ ಮಾತುಕತೆ ಬಯಸಿ, ಅವರು ಈ ಹೇಳಿಕೆ ನೀಡಿದ್ದಾರೆ’ ಎಂದೂ ಹೇಳಿದೆ.













































