ನಂಬಿಕೆ ಎಂಬುದು ನಮ್ಮ ಜೀವನ ನಡೆಸಲು ಪ್ರೇರಣೆ. ನಂಬಿಕೆ ಇಲ್ಲದಿದ್ದರೆ ಜೀವನ ಮಾಡುವುದೇ ಕಷ್ಟ ಎಂದು ಡಿ.ಕೆ.ಶಿವಕುಮಾರ್ ಸಿಎಂ ಆಗುವ ಕುರಿತ ಪ್ರಶ್ನೆಗೆ ಅವರು ಉತ್ತರಿಸಿದರು.
ಬೆಂಗಳೂರು: ಡಿ.ಕೆ.ಶಿವಕುಮಾರ್ ಸಿಎಂ ಆಗುವ ಭರವಸೆ, ನಂಬಿಕೆ ಈಗಲೂ ಇದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು.ಸದಾಶಿವನಗರ ನಿವಾಸದ ಬಳಿ ಇಂದು ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಸಿಎಂ ಆಗುವ ಬಗ್ಗೆ ಪ್ರತಿಕ್ರಿಯಿಸುತ್ತಾ, ಆ ಭರವಸೆ ಇಂದೂ ಇದೆ, ನಾಳೆಯೂ ಇರುತ್ತದೆ. ನಂಬಿಕೆ ಎಂಬುದು ನಮ್ಮ ಜೀವನ ನಡೆಸಲು ಪ್ರೇರಣೆ. ನಂಬಿಕೆ ಇಲ್ಲದಿದ್ದರೆ ಜೀವನ ಮಾಡುವುದೇ ಕಷ್ಟವಾಗುತ್ತದೆ. ಅವರು ಪಕ್ಷಕ್ಕೆ ಬಹಳ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಕೆಲವು ಭಾಗದ ಜನರು ವಿಶ್ವಾಸವಿಟ್ಟು ಶಿವಕುಮಾರ್ಗೆ ಒಂದು ಬಾರಿ ಅವಕಾಶ ಸಿಗಲಿ ಎಂದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಆದರೆ ಈಗ ಸಿಎಂ ಸೀಟು ಖಾಲಿ ಇಲ್ಲ ಎಂದಿದ್ದಾರೆ.
ಶಿವಕುಮಾರ್ ಅವರ ಶ್ರಮಕ್ಕೆ ಪ್ರತಿಫಲ ಸಿಗುತ್ತದೆಯೇ? ಎಂದು ಕೇಳಿದಾಗ, ಖಂಡಿತವಾಗಿಯೂ ಯಾವುದಾದರೂ ಒಂದು ದಿನ ಪ್ರತಿಫಲ ಸಿಗಬೇಕು. ಸಿಕ್ಕೇ ಸಿಗುತ್ತದೆ. ಅವರು ಸಿಎಂ ಆಗುತ್ತಾರೋ ಇಲ್ಲವೋ ಎಂಬ ವಿಚಾರ ತೀರ್ಮಾನ ಮಾಡಲು ನಾನು ಸಣ್ಣವ. ಈ ವಿಚಾರವನ್ನು ವರಿಷ್ಠರು ತೀರ್ಮಾನಿಸಬೇಕು. ಸದ್ಯಕ್ಕೆ ಸಿದ್ದರಾಮಯ್ಯನವರು ನಮ್ಮ ಮುಖ್ಯಮಂತ್ರಿ. ಈ ವಿಚಾರದಲ್ಲಿ ಎರಡು ಮಾತಿಲ್ಲ ಎಂದರು.ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ ಹೈಕಮಾಂಡ್ ಮಾತಿಗೆ ಬದ್ಧರಾಗಿದ್ದಾರೆ. ಮುಖ್ಯಮಂತ್ರಿಯಾಗಿರುವವರು ಮುಂದುವರೆಯುತ್ತೇನೆ ಎಂದು ಹೇಳಿದರೆ ಅದರಲ್ಲಿ ತಪ್ಪೇನಿದೆ?. ಅವರು ಕಾಂಗ್ರೆಸ್ ಪಕ್ಷದ ನಾಯಕರು, ಶಾಸಕಾಂಗ ಪಕ್ಷ ಹಾಗೂ ಹೈಕಮಾಂಡ್ ತೀರ್ಮಾನ ಮಾಡಿ ಅವರನ್ನು ಸಿಎಂ ಮಾಡಿದೆ. ಅವರು ಸರ್ಕಾರ ನಡೆಸುತ್ತಿದ್ದಾರೆ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಅವರು ನನ್ನ ಮುಂದೆ ಯಾವುದೇ ಆಯ್ಕೆ ಇಲ್ಲ, ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುವುದಾಗಿ ಹೇಳಿದ ಬಗ್ಗೆ ಮಾತನಾಡುತ್ತಾ, ಮೊದಲಿನಿಂದಲೂ ಅದನ್ನೇ ಹೇಳುತ್ತಿದ್ದಾರೆ. ಈಗಲೂ ಅದನ್ನೇ ಹೇಳಿದ್ದಾರೆ. ಮುಂದೆಯೂ ಹೇಳುತ್ತಾರೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಹೈಕಮಾಂಡ್ ತೀರ್ಮಾನವನ್ನು ಪಾಲಿಸಿ ಶಿಸ್ತು ಕಾಪಾಡುವುದು ಅವರ ಕರ್ತವ್ಯ. ಹಾಗಾಗಿ ಅವರು ಕೆಲವು ವಿಚಾರವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದರು.
ಅಸಹಾಯಕತೆ ಅಲ್ಲ, ಪಕ್ಷಕ್ಕೆ ನೀಡುವ ಗೌರವ: ಡಿ.ಕೆ.ಶಿವಕುಮಾರ್ ಅಸಹಾಯಕತೆ ವ್ಯಕ್ತಪಡಿಸಿದ್ದಾರಾ ಎಂಬ ಪ್ರಶ್ನೆಗೆ, ಅದು ಅಸಹಾಯಕತೆ ಅಲ್ಲ. ಪಕ್ಷ ಹಾಗೂ ಅದರ ನಾಯಕತ್ವಕ್ಕೆ ನೀಡುವ ಗೌರವ. ಪಕ್ಷದ ಜವಾಬ್ದಾರಿಯುತ ಸ್ಥಾನದಲ್ಲಿರುವಾಗ ನಾವು ಪಕ್ಷಕ್ಕೆ ಗೌರವ ನೀಡಬೇಕು. ಶಿವಕುಮಾರ್ ಆ ಕೆಲಸ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.ಕೋವಿಡ್ ಲಸಿಕೆಯ ದುಷ್ಪರಿಣಾಮದಿಂದ ಈ ಸಾವುಗಳು ಸಂಭವಿಸುತ್ತಿವೆ ಎಂಬ ಶಂಕೆ ಬಗ್ಗೆ ಪ್ರತಿಕ್ರಿಯಿಸುತ್ತಾ, ಈ ವಿಚಾರವಾಗಿ ವಿಶ್ವ ಆರೋಗ್ಯ ಸಂಸ್ಥೆ ಕೂಡ ಕೆಲವು ಅಂಶಗಳನ್ನು ಪ್ರಸ್ತಾಪ ಮಾಡಿದ್ದು, ಇದರ ಬಗ್ಗೆಯೂ ಗಮನಹರಿಸಬೇಕಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕೇ ಹೊರತು, ರಾಜಕೀಯವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದರು.
ನಂದಿನಿ ಬಳಸಿ, ರೈತರನ್ನು ಉಳಿಸಿ: ಕೆಎಂಎಫ್ ಅಧ್ಯಕ್ಷ ಸ್ಥಾನದ ಬಗ್ಗೆ ಮಾಲೂರು ಶಾಸಕ ನಂಜೇಗೌಡ ಅವರ ಹೇಳಿಕೆ ಬಗ್ಗೆ ಕೇಳಿದಾಗ, ನಾನು ಯಾವುದೇ ಸ್ಥಾನಕ್ಕೆ ಅರ್ಜಿ ಹಾಕಿಲ್ಲ. ನನಗೆ ಈ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.














































