ಸಿದ್ದರಾಮಯ್ಯ ಅವರ 3 ‘ನಾನೇ CM’ ಹೇಳಿಕೆ ಬೆನ್ನಲ್ಲೇ ಖರ್ಗೆ ನಿವಾಸಕ್ಕೆ ಸಚಿವರ ದಂಡು

Picture of Savistara

Savistara

Bureau Report

ಬೆಂಗಳೂರು: ‘ಐದು ವರ್ಷವೂ ನಾನೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದೇನೆ’ ಎಂದು ನವದೆಹಲಿಯಲ್ಲಿ ಸಿದ್ದರಾಮಯ್ಯ ಪುನರುಚ್ಚರಿಸಿದ ಬೆನ್ನಲ್ಲೆ, ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸಚಿವರು ಸದಾಶಿವನಗರದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನಿವಾಸಕ್ಕೆ ದೌಡಾಯಿಸಿ ಚರ್ಚೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಗುರುವಾರ ಸಂಜೆ ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ಮೊದಲೇ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ‘ಮುಖ್ಯಮಂತ್ರಿ ಬದಲಾವಣೆಯ ವಿಚಾರ ಊಹಾಪೋಹ’ ಎಂದಿದ್ದಾರೆ. ಅವರ ಹೇಳಿಕೆ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ, ಸಚಿವರಾದ ಜಿ. ಪರಮೇಶ್ವರ, ಸತೀಶ ಜಾರಕಿಹೊಳಿ, ಎಚ್‌.ಸಿ. ಮಹದೇವಪ್ಪ, ಜಮೀರ್ ಅಹಮದ್‌ಖಾನ್‌, ಈಶ್ವರ ಖಂಡ್ರೆ, ಶರಣಪ್ರಕಾಶ್ ಪಾಟೀಲ ಮತ್ತು ದಿನೇಶ್ ಗುಂಡೂರಾವ್ ಅವರು ಖರ್ಗೆ ಮನೆಗೆ ತೆರಳಿ ಮಾತುಕತೆ ನಡೆಸಿದರು.ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗೆ ತಮ್ಮ ಮಾತಿನ ಮೂಲಕ ಸಿದ್ದರಾಮಯ್ಯ ತೆರೆ ಎಳೆದಿರುವುದು ಕೆಲವು ಸಚಿವರಲ್ಲಿ ಸಂಚಲನ ಮೂಡಿಸಿದೆ. ಸದ್ಯದಲ್ಲೇ ಸಚಿವ ಸಂಪುಟ ಪುನರ್‌ರಚನೆ ವಿಚಾರ ಮುನ್ನಲೆಗೆ ಬರುವ ಸಾಧ್ಯತೆಯಿದೆ. ಈ ಕಾರಣಕ್ಕೆ ಖರ್ಗೆ ಅವರನ್ನು ಸಚಿವರು ಭೇಟಿ ಮಾಡಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆಯುವುದು ಸಚಿವರ ಉದ್ದೇಶವಾಗಿತ್ತು. ಸುಮಾರು 45 ನಿಮಿಷ ಸಚಿವರುಗಳ ಜೊತೆ ಮಾತುಕತೆ ನಡೆಸಿದ ಖರ್ಗೆ, ಬಳಿಕ ದೆಹಲಿಗೆ ತೆರಳಿದರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಖರ್ಗೆ ಭೇಟಿ ಬಳಿಕ ಮಾತನಾಡಿದ ಸತೀಶ ಜಾರಕಿಹೊಳಿ, ‘ನಾವೆಲ್ಲರೂ ಒಟ್ಟಿಗೆ ಬಂದು ರಾಜ್ಯದ ಸ್ಥಿತಿಯ ಬಗ್ಗೆ ಖರ್ಗೆಯವರ ಜೊತೆ ಚರ್ಚೆ ಮಾಡಿದ್ದೇವೆ. ಅದು ಬಿಟ್ಟು ಬೇರೆ ಏನೂ ಚರ್ಚೆ ಮಾಡಿಲ್ಲ’ ಎಂದರು. ‘ಖರ್ಗೆಯವರ ಬಳಿ ರಾಜಕೀಯ ಚರ್ಚೆ ಮಾಡಿಲ್ಲ. ಸಿದ್ದರಾಮಯ್ಯ ಅನುಯಾಯಿಗಳು ಎನ್ನುವುದಕ್ಕಿಂತ ನಾವು ಕಾಂಗ್ರೆಸ್ ಅನುಯಾಯಿಗಳು’ ಎಂದು ಎಚ್.ಸಿ. ಮಹದೇವಪ್ಪ ಹೇಳಿದರು. ‘ನಮ್ಮ ಪಾಡಿಗೆ ನಾವು ಬಂದಿದ್ದೆವು. ಬೇರೆ ಏನೂ ಇಲ್ಲ’ ಎಂದು ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದರು.

[t4b-ticker]
error: Content is protected !!