ಮೈಸೂರು: ‘ರಾಜ್ಯ ಸರ್ಕಾರಿಂದ ಆಗಿರುವ ಅಭಿವೃದ್ಧಿಯ ಬಗ್ಗೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ವೇತಪತ್ರ ಹೊರಡಿಸಲಿ, ನಂತರ ನಮ್ಮನ್ನು ಚರ್ಚೆಗೆ ಆಹ್ವಾನಿಸಲಿ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸವಾಲು ಹಾಕಿದರು.
ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ರಾಜ್ಯ ಸರ್ಕಾರಕ್ಕೆ ಜಾತಿ ಜನಗಣತಿ ಮಾಡುವ ಯೋಗ್ಯತೆಯೇ ಇಲ್ಲ. ಈ ಹಿಂದೆ ಕಾಂತರಾಜ್ ಆಯೋಗದಿಂದ ಮಾಡಿಸಿದ ವರದಿಯನ್ನು ಕಸದ ಬುಟ್ಟಿಗೆ ಎಸೆದಿದ್ದು ಇದೇ ಸರ್ಕಾರ. ಈಗ ಅದು ಕಳೆದು ಹೋಗಿದೆ, ಪತ್ತೆ ಇಲ್ಲ ಎಂದು ಹೇಳುತ್ತಿದೆ’ ಎಂದು ಆರೋಪಿಸಿದರು.’ಕೇಂದ್ರ ಸರ್ಕಾರ ಈಗ ನಿಯಮಬದ್ಧವಾಗಿ ಜಾತಿ ಜನಗಣತಿ ನಡೆಸುತ್ತಿದೆ. ಕೇಂದ್ರದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಏಕೆ ಈ ಕ್ರಮ ಕೈಗೊಂಡಿರಲಿಲ್ಲ. ಈಗ ಕಾಂಗ್ರೆಸ್ ಸುಮ್ಮನೆ ರಾಜಕಾರಣ ಮಾಡುತ್ತಿದೆ. ಕೇಂದ್ರವೇ ಜಾತಿ ಜನಗಣತಿ ಮಾಡುವಾಗ ರಾಜ್ಯ ಸರ್ಕಾರದಿಂದಲೂ ನಡೆಸುವ ಅವಶ್ಯಕತೆ ಇಲ್ಲ’ ಎಂದರು.’ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ’ ಎಂಬ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಅವರು, ‘ಯಾರು ಯಾರಿಗೂ ಹೋಲಿಸಿ ಮಾತನಾಡುವುದು ಸರಿಯಲ್ಲ’ ಎಂದು ಹೇಳಿದರು.











































