ಕೋಡಿಶ್ರೀ – ಡಿಕೆ ಶಿವಕುಮಾರ್ ಭೇಟಿ : ‘ಸೆಪ್ಟಂಬರ್ ಕ್ರಾಂತಿ’ ಸುದ್ದಿಯ ಮಧ್ಯೆ, ಶ್ರೀಗಳಿಂದ ಸಿಕ್ಕ ಆಶೀರ್ವಾದವೇನು?

Picture of Savistara

Savistara

Bureau Report

ತಾಳೇಗರಿ ಆಧಾರಿತವಾಗಿ ಭವಿಷ್ಯವನ್ನು ನುಡಿಯುವ ಕೋಡಿಮಠದ ಶ್ರೀಗಳನ್ನು ಭೇಟಿಯಾಗಿ, ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಶೀರ್ವಾದವನ್ನು ಪಡೆದುಕೊಂಡಿದ್ದಾರೆ. ಆ ವೇಳೆ, ಶ್ರೀಗಳು ಏನು ಭವಿಷ್ಯವನ್ನು ನುಡಿದರು ಎನ್ನುವ ಕುತೂಹಲ ಮನೆಮಾಡಿದೆ.ಹಾಸನ : ಜಿಲ್ಲೆಯಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೋಡಿಮಠದ ಶ್ರೀಗಳನ್ನು ಭೇಟಿಯಾಗಿದ್ದಾರೆ. ಆ ವೇಳೆ, ಶ್ರೀಗಳು ಏನು ಆಶೀರ್ವಾದ ಮಾಡಿದರು ಎನ್ನುವ ಪ್ರಶ್ನೆಗೆ ಡಿಕೆಶಿ ಮಾರ್ಮಿಕವಾಗಿ ಉತ್ತರಿಸಿದರು. ಸೆಪ್ಟಂಬರ್ ಕ್ರಾಂತಿಯ ಸುದ್ದಿಯ ನಡುವೆ, ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.ಮುಖ್ಯಮಂತ್ರಿ ಬದಲಾವಣೆಯ ಕುರಿತು ಇತ್ತೀಚೆಗೆ ಅರಸೀಕೆರೆ ಕೋಡಿಮಠದ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯವನ್ನು ನುಡಿದಿದ್ದರು. ಹಾಲು ಕೆಟ್ಟರೂ, ಹಾಲುಮತ ಸಮುದಾಯ ಕೆಡುವುದಿಲ್ಲ ಎಂದು ಹೇಳಿದ್ದರು. ಅಂದರೆ, ಸಿದ್ದರಾಮಯ್ಯ ಅವರಾಗಿಯೇ ಸಿಎಂ ಕುರ್ಚಿಯಿಂದ ಇಳಿಯಬೇಕು, ಬಲವಂತವಾಗಿ ಅವರನ್ನು ಇಳಿಸಲು ಸಾಧ್ಯವಿಲ್ಲ ಎಂದಿದ್ದರು. ಈ ಹಿನ್ನಲೆಯಲ್ಲಿ, ಡಿಕೆ ಶಿವಕುಮಾರ್, ಕೋಡಿಶ್ರೀಗಳನ್ನು ಭೇಟಿಯಾಗಿದ್ದದ್ದು ಕುತೂಹಲಕ್ಕೆ ಕಾರಣವಾಗಿದೆ.ಹಾಸನ ಜಿಲ್ಲೆ ಅರಸೀಕೆರೆಯ ಕೋಡಿ ಮಠಕ್ಕೆ ಶನಿವಾರ (ಜುಲೈ 26) ಭೇಟಿ ನೀಡಿ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದು, ಶಿವಲಿಂಗ ಅಜ್ಜಯ್ಯ ಗದ್ದುಗೆಗೆ ಪೂಜೆ ಸಲ್ಲಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಆ ವೇಳೆ, ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ನಾವು ಎಲ್ಲರ ಸಂಸ್ಕೃತಿಗೆ ಬೆಲೆ ಕೊಡುತ್ತೇವೆ ಎಂದು ಹೇಳಿದ್ದಾರೆ.ಇದಕ್ಕೂ ಮುನ್ನ ಅರಸೀಕೆರೆ ಜೇನುಕಲ್ಲು ಸಿದ್ದೇಶ್ವರ ಬೆಟ್ಟದ ಮೆಟ್ಟಿಲುಗಳಿಗೆ ನಂತರ ಜೇನುಕಲ್ಲು ಸಿದ್ದೇಶ್ವರ ದೇಗುಲಕ್ಕೆ ತೆರಳಿ, ಡಿಕೆ ಶಿವಕುಮಾರ್ ಪೂಜೆ ಸಲ್ಲಿಸಿದ್ದರು. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಿದ್ದಂತಹ ಸಂದರ್ಭದಲ್ಲಿ, ಕಾರ್ಯಕರ್ತರು ಡಿಕೆ ಶಿವಕುಮಾರ್ ಮುಂದಿನ ಸಿಎಂ ಎನ್ನುವ ಘೋಷಣೆಯನ್ನು ಕೂಗಿದರು.”ನನಗೆ ಧರ್ಮ, ದೇವರು, ಸಂಸ್ಕೃತಿಯ ಬಗ್ಗೆ ನಮ್ಮ ಆಚಾರವಿಚಾರಗಳ ಬಗ್ಗೆ ನಂಬಿಕೆ ಜಾಸ್ತಿ. ಯಾವುದೇ ಧರ್ಮದ ಯಾವುದೇ ಪದ್ದತಿಗಳು, ತನ್ನದೇ ಆದಂತಹ ಶಕ್ತಿಯನ್ನು ಹೊಂದಿದೆ. ಕೆಲವರು ನಂಬದೇ ಇರಬಹುದು, ಆದರೆ ಇದನ್ನು ನಂಬುತ್ತೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್, ಕೋಡಿಶ್ರೀಗಳನ್ನು ಭೇಟಿಯಾದ ನಂತರ ಹೇಳಿದ್ದಾರೆ.ಬಹಳ ವರ್ಷದ ನಂತರ ಇಲ್ಲಿಗೆ ಬಂದಿದ್ದೇನೆ, ಕೋಡಿಶ್ರೀಗಳು ಮಠದಲ್ಲೇ ಇದ್ದಾರೆನ್ನುವ ಮಾಹಿತಿ ಸಿಕ್ಕಿತು. ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದವನ್ನು ಪಡೆದುಕೊಂಡು ಬಂದಿದ್ದೇನೆ. ಎಲ್ಲವೂ ಒಳ್ಳೆದಾಗುತ್ತೆ ಎನ್ನುವ ನಂಬಿಕೆಯಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.ಅರಸೀಕೆರೆಯಲ್ಲಿ ನಡೆದ ವಿವಿಧ ಇಲಾಖೆಗಳ ಯೋಜನೆಗಳ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಭಾಗವಹಿಸಿದ್ದರು. ಯೋಗಿ ಎಂದು ಕರೆಸಿಕೊಳ್ಳುವ ಮುನ್ನ ನಾವು ಉಪಯೋಗಿ ಎಂದು ಕರೆಸಿಕೊಳ್ಳಬೇಕು. ಜನರ ಪ್ರೀತಿ ವಿಶ್ವಾಸ ಮರದಲ್ಲಿ, ಮಾರುಕಟ್ಟೆಯಲ್ಲಿ ಸಿಗುವುದಿಲ್ಲ. ನಾವು ಕೆಲಸ ಮಾಡುವ ಮೂಲಕ ಜನರ ಮನದಲ್ಲಿ ಪ್ರೀತಿ ವಿಶ್ವಾಸ ಗಳಿಸಬೇಕು ಎಂದು ಡಿಕೆ ಶಿವಕುಮಾರ್ ಹೇಳಿದರು.ರಾಜ್ಯದಲ್ಲಿ ಸೆಪ್ಟಂಬರ್ ಕ್ರಾಂತಿ ನಡೆಯಲಿದೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ರಾಜಣ್ಣನವರ ಹೇಳಿಕೆಯನ್ನು ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಕೂಡ ಹೌದೆಂದಿದ್ದರು. ಜಿಲ್ಲೆಯ ಕಾರ್ಯಕ್ರಮದಲ್ಲಿ ಬಂದಿದ್ದೆ, ಹಾಗಾಗಿ ಕೋಡಿಶ್ರೀಗಳನ್ನು ಭೇಟಿಯಾದೆ ಎಂದು ಡಿಕೆಶಿ ಹೇಳಿದರೂ, ಶ್ರೀಗಳ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!