ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಮಾಜಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್ ಹಾಗೂ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ.
ಮುಂಬೈ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಎಲ್ಲಾ 7 ಆರೋಪಿಗಳನ್ನು ಖುಲಾಸೆಗೊಳಿಸಿ ವಿಶೇಷ ಎನ್ಐಎ ಕೋರ್ಟ್ ತೀರ್ಪು ನೀಡಿದೆ. ಪ್ರಕರಣದಲ್ಲಿ ಮಾಜಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್ ಹಾಗೂ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ.2008ರ ಸೆಪ್ಟೆಂಬರ್ 29ರಂದು ಮಹಾರಾಷ್ಟ್ರದ ಸಮುದಾಯ ಸೂಕ್ಷ್ಮ ಪ್ರದೇಶವಾಗಿದ್ದ ಮಾಲೆಗಾಂವ್ನಲ್ಲಿ ರಂಜಾನ್ ಮಾಸದಲ್ಲಿ, ನವರಾತ್ರಿ ಮುನ್ನಾನ ಈ ಸ್ಫೋಟ ನಡೆದಿತ್ತು. ಈ ವೇಳೆ ಆರು ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.ಈ ಪ್ರಕರಣದ ತೀರ್ಪನ್ನು ಪ್ರಕಟಿಸಿದ ನ್ಯಾಯಾಲಯ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ), ಶಸ್ತ್ರಾಸ್ತ್ರ ಕಾಯ್ದೆ ಮತ್ತು ಇತರ ಕಾಯ್ದೆಗಳ ಅಡಿಯಲ್ಲಿ ಆರೋಪಿಗಳನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿದೆ.ಸ್ಪೋಟದಲ್ಲಿ ಸಾವನ್ನಪ್ಪಿದ ಸಂತ್ರಸ್ತರ ಕುಟುಂಬಗಳಿಗೆ ತಲಾ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ 50 ಸಾವಿರ ಪರಿಹಾರ ನೀಡುವಂತೆ ಕೋರ್ಟ್ ಸೂಚಿಸಿದೆ.
ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ. ಕಾರಣ, ಯಾವುದೇ ಧರ್ಮವೂ ಹಿಂಸೆಯನ್ನು ಪ್ರತಿಪಾದಿಸುವುದಿಲ್ಲ. ನ್ಯಾಯಾಲಯವು ಕೇವಲ ಗ್ರಹಿಕೆ ಮತ್ತು ನೈತಿಕ ಪುರಾವೆಗಳ ಮೇಲೆ ಯಾರನ್ನೂ ಶಿಕ್ಷೆಗೆ ಒಳಪಡಿಸಲು ಸಾಧ್ಯವಿಲ್ಲ. ಬಲವಾದ ಪುರಾವೆ ಬೇಕು ಎಂದು ಕೋರ್ಟ್ ತಿಳಿಸಿದೆ.
ತನಿಖೆಯಲ್ಲಿ ಹಲವಾರು ತಾಂತ್ರಿಕ ದೋಷಗಳು ಕಂಡುಬಂದಿದೆ ಎಂದು ನ್ಯಾಯಾಲಯ ತಿಳಿಸಿದ್ದು, ಈ ಆರೋಪಗಳನ್ನು ಸಾಬೀತು ಮಾಡುವಲ್ಲಿ ತನಿಖಾ ಸಂಸ್ಥೆಗಳು ವಿಫಲವಾಗಿವೆ ಎಂದಿದೆ.ಏಪ್ರಿಲ್ 19 ರಂದು ಪ್ರಾಸಿಕ್ಯೂಷನ್ ಮತ್ತು ಪ್ರತಿವಾದಿಗಳ ವಿಚಾರಣೆ ಮತ್ತು ಅಂತಿಮ ವಾದಗಳನ್ನು ಪೂರ್ಣಗೊಳಿಸಿದ ನಂತರ ನ್ಯಾಯಾಲಯವು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.
ದಶಕಗಳ ಕಾಲ ನಡೆದ ವಿಚಾರಣೆ:
2008ರಲ್ಲಿ ಸಂಭವಿಸಿದ ಈ ಪ್ರಕರಣ ಕುರಿತು ಆರಂಭದಲ್ಲಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ತನಿಖೆ ನಡೆಸಿತು. ಮೂರು ವರ್ಷಗಳ ಬಳಿಕ 2011ರಲ್ಲಿ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಲಾಯಿತು. 2016ರಲ್ಲಿ ಎನ್ಐಎ ಆರೋಪ ಪಟ್ಟಿಯನ್ನು ಸಲ್ಲಿಸಿ, ಸಾಕಷ್ಟು ಪುರಾವೆಗಳಿಲ್ಲ ಎಂದು ಉಲ್ಲೇಖಿಸಿತು.











































