ಕಾಂಗ್ರೆಸ್‌ನಲ್ಲಿ ಚಿಂತೆಗೆ ಕಾರಣವಾದ ಆಂತರಿಕ ಸಮೀಕ್ಷಾ ವರದಿ, ಈಗ ಚುನಾವಣೆ ನಡೆದರೆ ಪಕ್ಷಕ್ಕೆ ಎಷ್ಟು ಸೀಟು?

Picture of Savistara

Savistara

Bureau Report

ರಾಜ್ಯ ಕಾಂಗ್ರೆಸ್ ಸರ್ಕಾರವು ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಎರಡು ಆಂತರಿಕ ಸಮೀಕ್ಷೆಗಳನ್ನು ನಡೆಸಿದೆ. ಈ ಸಮೀಕ್ಷೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಉತ್ತಮ ಅಭಿಪ್ರಾಯವಿದ್ದರೂ, ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಬೇಕೆಂದು ಜನರು ಅಭಿಪ್ರಾಯಪಟ್ಟಿದ್ದಾರೆ. ಒಂದು ವೇಳೆ ಈಗ ಚುನಾವಣೆ ನಡೆದರೆ ಕಾಂಗ್ರೆಸ್ 90-95 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯ ಎಂದು ಪಕ್ಷ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಫಲಿತಾಂಶ ಬಂದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳು ತುಂಬಿವೆ. ಈ ಹಿನ್ನೆಲೆಯಲ್ಲಿ ಜನರ ಅಭಿಪ್ರಾಯ ಏನಿದೆ ಎಂಬ ಕುರಿತಾಗಿ ಆಂತರಿಕವಾಗಿ ಸಮೀಕ್ಷೆಯನ್ನು ನಡೆಸಲಾಗಿದೆ. ಪಕ್ಷ ಹಾಗೂ ಸರ್ಕಾರದ ವತಿಯಿಂದ ಪ್ರತ್ಯೇಕವಾಗಿ ಸಮೀಕ್ಷೆಗಳು ನಡೆದಿದೆ. ಈ ಸಮೀಕ್ಷೆಯಲ್ಲಿ ಗ್ಯಾರಂಟಿ ಯೋಜನೆಗಳು ಉತ್ತಮವೇ, ಆದ್ರೆ ಕೇವಲ ಗ್ಯಾರಂಟಿ ಕೊಟ್ಟರೆ ಮಾತ್ರ ಸಾಲದು; ಅಭಿವೃದ್ದಿ ಕೆಲಸ ಕಾರ್ಯಗಳಿಗೆ ಆದ್ಯತೆ ಕೊಡಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.ಕಾಂಗ್ರೆಸ್ ಮೂಲಗಳ ಪ್ರಕಾರ ಪಶ್ಚಿಮ ಬಂಗಾಳ ಮೂಲದ ಸಂಸ್ಥೆಯೊಂದಕ್ಕೆ ಸಮೀಕ್ಷೆಯ ಜವಾಬ್ದಾರಿ ನೀಡಲಾಗಿತ್ತು. ಈ ಸಂಸ್ಥೆ ರಾಜ್ಯಾದ್ಯಂತ ಜನರ ಮನದಾಳದ ಮಾತಿಗೆ ಕಿವಿಯಾಗುವ ಪ್ರಯತ್ನ ಮಾಡಿತ್ತು. ಈ ಸಂಸ್ಥೆ ಕೆಲವೊಂದು ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ಅಭಿಪ್ರಾಯ ಸಂಗ್ರಹಿಸಿದೆ. ಸರ್ಕಾರದ ಪರ ಹಾಗೂ ವಿರುದ್ಧ ಜನರಲ್ಲಿ ಏನೆಲ್ಲಾ ಅಭಿಪ್ರಾಯಗಳು ಇವೆ ಎಂಬ ನಿಟ್ಟಿನಲ್ಲಿ ಸಮೀಕ್ಷೆಯನ್ನು ನಡೆಸಿ ಮಾಹಿತಿಯನ್ನು ಕಲೆ ಹಾಕಿದೆ ಎಂದು ತಿಳಿದುಬಂದಿದೆ.

ಸಮೀಕ್ಷೆಯಲ್ಲಿ ಕಂಡು ಬಂದ ಪ್ಲಸ್ ಹಾಗೂ ಮೈನಸ್ ಅಂಶಗಳೇನು?

ಸರ್ಕಾರ ಆಂತರಿಕವಾಗಿ ನಡೆಸಿದ ಸಮೀಕ್ಷೆಯಲ್ಲಿ ಕೆಲವೊಂದು ಪ್ಲಸ್ ಹಾಗೂ ಮೈನಸ್ ಅಂಶಗಳು ಪತ್ತೆಯಾಗಿವೆ. ಗ್ರಾಮೀಣ ಭಾಗದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಲ್ಲಿ ಉತ್ತಮ ಅಭಿಪ್ರಾಯಗಳಿವೆ. ಆದರೆ ನಗರ ಪ್ರದೇಶಗಳಲ್ಲಿ ಇದಕ್ಕೆ ವ್ಯತಿರಿಕ್ತವಾದ ಅಭಿಪ್ರಾಯಗಳು ವ್ಯಕ್ತವಾಗಿವೆ.ಮುಂದಿನ ಚುನಾವಣೆಯಲ್ಲಿ ಗ್ಯಾರಂಟಿಯಿಂದ ನಿರೀಕ್ಷಿತ ಮಟ್ಟದ ಲಾಭ ಸಿಗಲ್ಲ ಎಂಬ ಅಂಶ ಸಮೀಕ್ಷೆಯಲ್ಲಿ ಕಂಡು ಬಂದಿದೆ. ಈ ವಿಚಾರ ಕಾಂಗ್ರೆಸಿಗರಿಗೆ ಆತಂಕ ತಂದಿದೆ.ಇನ್ನು ಕಾಂಗ್ರೆಸ್ ಪಕ್ಷದಿಂದಲೈ ಪ್ರತ್ಯೇಕ ಸಮೀಕ್ಷೆಯನ್ನು ನಡೆಸಲಾಗಿದೆ. ಈ ಸಮೀಕ್ಷೆಯಲ್ಲಿ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಜನರ ಪ್ರತಿಕ್ರಿಯೆಯನ್ನು ತಿಳಿದುಕೊಳ್ಳುವ ಪ್ರಯತ್ನ ನಡೆಸಲಾಗಿದೆ. ಕೇವಲ ಸರ್ಕಾರದ ಕಾರ್ಯವೈಖರಿ ಮಾತ್ರವಲ್ಲದೆ ಕ್ಷೇತ್ರವಾರು ಶಾಸಕರು ಕಾರ್ಯವೈಖರಿಯ ಬಗ್ಗೆಯೂ ಮಾಹಿತಿಯನ್ನು ಸಂಗ್ರಹ ಮಾಡಲಾಗಿದೆ.

ಸಮೀಕ್ಷೆಯಿಂದ ತಿಳಿದು ಬಂದ ಒಟ್ಟು ಸಾರಾಂಶವೇನೆಂದರೆ, ಸರ್ಕಾರ ಕೇವಲ ಗ್ಯಾರಂಟಿಗಳನ್ನು ಮಾತ್ರ ನೆಚ್ಚಿಕೊಳ್ಳದೆ, ಇತರ ಅಭಿವೃದ್ದಿ ಕೆಲಸಗಳತ್ತಲೂ ಹೆಚ್ಚಿನ ಆದ್ಯತೆ ಕೊಡಬೇಕು. ಜನರು ಗುರುತಿಸುವಂತಹ ಕೆಲಸ ಕಾರ್ಯಗಳನ್ನು ಮಾಡಬೇಕು ಎಂಬುದಾಗಿದೆ.ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಹೀಗೆ ಮುಂದುವರಿದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯುವುದು ಸುಲಭವಲ್ಲ. ಈಗ ಚುನಾವಣೆ ನಡೆದರೆ ಕಾಂಗ್ರೆಸ್ 90 – 95 ಸ್ಥಾನ ಮಾತ್ರ ಗೆಲ್ಲೋದಕ್ಕೆ ಸಾಧ್ಯ. ಹಾಗಾಗಿ ಪಕ್ಷ ಮತ್ತು ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕಾಗಿದೆ ಎಂಬ ಉಲ್ಲೇಖವೂ ವರದಿಯಲ್ಲಿ ಇದೆ ಎಂದು ತಿಳಿದುಬಂದಿದೆ.

ಸಮೀಕ್ಷೆ ವರದಿ ಆಧರಿಸಿ ಶಾಸಕರಿಗೆ ಸೂಚನೆ ನೀಡಿರುವ ಸಿದ್ದರಾಮಯ್ಯ!

ಈ ನಡುವೆ ಸಿಎಂ ಸಿದ್ದರಾಮಯ್ಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿಗಳ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಸಮೀಕ್ಷೆಯ ವಿಚಾರವಾಗಿ ಕೆಲವೊಂದು ವಿಚಾರಗಳನ್ನು ಪ್ರಸ್ತಾಪ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕ್ಷೇತ್ರಗಳಲ್ಲಿ ಗ್ಯಾರಂಟಿಗಳ ಬಗ್ಗೆ ಹೆಚ್ಚು ಹೆಚ್ಚು ಪ್ರಚಾರ ಮಾಡಿ , ಜೊತೆಗೆ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಇಂದಿನಿಂದಲೇ ಇದನ್ನು ಗಂಭೀರವಾಗಿ ತೆಗೆದುಕೊಳ್ಳಿ ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.

[t4b-ticker]
error: Content is protected !!