ದೆಹಲಿಯಲ್ಲಿ ಮೂವರಿಂದ ಸಂಚು: ಪಿತೂರಿ ವಿದ್ಯೆ ನನಗೂ ಗೊತ್ತಿದೆ; ರಾಜಣ್ಣ ಗುಡುಗು

Picture of Savistara

Savistara

Bureau Report

ಮಧುಗಿರಿ: ‘ಪಿತೂರಿ ಮಾಡುವುದು ನನಗೂ ಬರುತ್ತದೆ. ಪಿತೂರಿ ವಿದ್ಯೆ ಬರುವುದಿಲ್ಲ ಅಂದುಕೊಳ್ಳಬೇಕಿಲ್ಲ’ ಎಂದು ಸಚಿವ ಸ್ಥಾನದಿಂದ ವಜಾಗೊಂಡಿರುವ ಕೆ.ಎನ್.ರಾಜಣ್ಣ ಪರೋಕ್ಷವಾಗಿ ತಮ್ಮ ವಿರೋಧಿಗಳಿಗೆ ಎಚ್ಚರಿಕೆ ನೀಡಿದರು.

ಪಟ್ಟಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನನ್ನನ್ನು ಸಚಿವ ಸ್ಥಾನದಿಂದ ಇಳಿಸಲು ಮೂವರು ದೆಹಲಿಯಲ್ಲಿ ವ್ಯವಸ್ಥಿತವಾಗಿ ಪಿತೂರಿ ಮಾಡಿದ್ದಾರೆ. ಪಿತೂರಿ ವಿದ್ಯೆ ನನಗೂ ಗೊತ್ತಿದೆ. ಈ ಸಂದರ್ಭದಲ್ಲಿ ಅದನ್ನು ಬಳಸುವುದಿಲ್ಲ. ಮುಂದೆ ಕಾಲ ಬರುತ್ತದೆ’ ಎಂದು ಮಾರ್ಮಿಕವಾಗಿ ನುಡಿದರು.

‘ವಿಧಾನಸಭೆ ಅಧಿವೇಶನ ಮುಗಿದ ನಂತರ ದೆಹಲಿಗೆ ಹೋಗಿ ರಾಹುಲ್ ಗಾಂಧಿ ಅವರನ್ನು ಭೇಟಿಮಾಡಿ ಎಲ್ಲ ವಿಚಾರ ತಿಳಿಸುತ್ತೇನೆ. ಸಮಯ ಬಂದಾಗ ಸಚಿವ ಸ್ಥಾನ ತೆಗೆದುಕೊಳ್ಳುತ್ತೇನೆ. ಇದೇ ಅವಧಿಯಲ್ಲಿ ಸಚಿವನಾಗುತ್ತೇನೆ. ಹೈಕಮಾಂಡ್ ಒಪ್ಪಿಸುತ್ತೇನೆ. ದೆಹಲಿಗೆ ಹೋಗಿ ಬಂದ ಮೇಲೆ ಸಿಹಿ ಸುದ್ದಿ ಕೊಡುತ್ತೇನೆ’ ಎಂದು ಹೇಳಿದರು.’ನಾನು ಯಾವತ್ತೂ ಸುಳ್ಳು ಹೇಳುವುದಿಲ್ಲ. ಸ್ವಾರ್ಥಕ್ಕಾಗಿ ಸುಳ್ಳು ಹೇಳಿಲ್ಲ. ಬೇರೆಯವರ ಅನುಕೂಲಕ್ಕಾಗಿ ಸುಳ್ಳು ಹೇಳಿದ್ದೇನೆ. ಹೆಚ್ಚುವರಿಯಾಗಿ ಉಪಮುಖ್ಯಮಂತ್ರಿಗಳ ನೇಮಕ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದೇನೆ. ನಾನು ಹೇಳಿದ್ದನ್ನು ದೆಹಲಿಗೆ ತಲುಪಿಸಿದ್ದಾರೆ. ನಾನೇನು ಮುಚ್ಚು ಮರೆ ಮಾಡಿಲ್ಲ. ಪಕ್ಷದ ವಿಚಾರವನ್ನು ಸಾರ್ವತ್ರಿಕವಾಗಿ ಮಾತನಾಡಬಾರದು. ವಾತಾವರಣ, ಪರಿಸ್ಥಿತಿ ಸತ್ಯವನ್ನು ಕಹಿ ಮಾಡುತ್ತದೆ’ ಎಂದು ತಿಳಿಸಿದರು.

[t4b-ticker]
error: Content is protected !!