ಮಂಗಳೂರು: ಡಿಜೆ ಬಳಕೆಗೆ ಸಂಬಂಧಿಸಿಕಾನೂನು ಸ್ಪಷ್ಟವಾಗಿದೆ. ಹಾಗಾಗಿ ಕಾರ್ಯಕ್ರಮಗಳಲ್ಲಿ ಡಿಜೆಗೆ ಅವಕಾಶ ನೀಡಲಾಗದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸೇರುವ ಜನಸಂಖ್ಯೆ, ಸ್ಥಳ ಹಾಗೂ ಕಾರ್ಯಕ್ರಮದ ಅಗತ್ಯಕ್ಕೆ ಅನುಗುಣವಾಗಿ ಧ್ವನಿವರ್ಧಕ ಬಳಕೆಗೆ ಅವಕಾಶ ನೀಡಬೇಕೆಂದು ದ.ಕ. ಜಿಲ್ಲಾ ಧ್ವನಿವರ್ಧಕ ಹಾಗೂ ದೀಪಾಲಂಕಾರ ಮಾಲಕರ ಸಂಘದ ಬೇಡಿಕೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ತಮ್ಮ ಬೇಡಿಕೆಯಂತೆ ಧ್ವನಿವರ್ಧಕಗಳಿಗೆ ಅವಕಾಶ ನೀಡದಿದ್ದರೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಧ್ವನಿವರ್ಧಕಗಳನ್ನು ನೀಡುವುದಿಲ್ಲ ಎಂದು ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದವರು ಬುಧವಾರ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಬಹಿಷ್ಕಾರ ಸೇರಿದಂತೆ ಯಾವುದೇ ರೀತಿಯ ನಿರ್ಧಾರಕ್ಕೆ ಅವರು ಮುಕ್ತರಾಗಿರುತ್ತಾರೆ. ಅದು ಅವರ ಪರಿಕರಗಳು ಮತ್ತು ಅವರ ನಿರ್ಧಾರ ಎಂದು ಹೇಳಿದ್ದಾರೆ.
ಸಾರ್ವಜನಿಕರು, ಹಿರಿಯ ನಾಗರಿಕರು, ರೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಸಂಭ್ರಮಾಚರಣೆಯನ್ನು ನಡೆಸಲು ಪೂರಕ ವ್ಯವಸ್ಥೆಗಳನ್ನು ಮಾಡಲಾಗುವುದು. ಈಗಾಗಲೇ ನಿಯಮಗಳಿವೆ. ವಿನಾಯಿತಿ ಸಮರ್ಥನೀಯ ಕಾರಣಗಳಡಿ ಕೆಲವೊಂದು ನಿಯಮಗಳಿಗೆ ಕೆಲ ವಿನಾಯಿತಿ ನೀಡಬಹುದು. ಆದರೆ ನಿಯಮವಾಗುವುದಿಲ್ಲ ಎಂದು ಕಮಿಷನರ್ ತಿಳಿಸಿದ್ದಾರೆ.











































