ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ ಡಿ ಕೆ ಶಿವಕುಮಾರ್

Picture of Savistara

Savistara

Bureau Report

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ ಎಂದು ಹೇಳಿದ್ದಾರೆ.

ಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ ಪ್ರಾರ್ಥನೆ ಮಾಡಿಕೊಳ್ಳುತ್ತಾರೆ. ಇದು ಹಿಂದೂಗಳ ಆಸ್ತಿಯಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಬೇಡ ಎಂಬ ಬಿಜೆಪಿ ‌ನಾಯಕರ ವಿರೋಧದ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ‘ನಾವುಗಳು ಮಸೀದಿ, ದರ್ಗಾಗಳಿಗೆ, ಜೈನರ ಬಸದಿಗಳಿಗೆ, ಚರ್ಚ್, ಗುರುದ್ವಾರಗಳಿಗೆ ಹೋಗುತ್ತೇವೆ. ನಾವು ಗುರುದ್ವಾರಕ್ಕೆ ಹೋಗೋದನ್ನ ಯಾರಾದರೂ ತಪ್ಪಿಸಿದ್ದಾರಾ? ಹಿಂದೂ ದೇವಸ್ಥಾನಗಳಿಗೆ ಅವರುಗಳು ಬರುವುದನ್ನು ನಾವು ವಿರೋಧಿಸಿದ್ದೇವೆಯೇ? ಯಾವುದೇ ಶ್ರದ್ದಾ ಕೇಂದ್ರಗಳಿಗೆ ಯಾರು ಬೇಕಾದರೂ ಹೋಗಿ ಬರಬಹುದು’ ಎಂದರು.

ಎಷ್ಟೋ ಜನ ಹಿಂದೂಗಳು ಮುಸ್ಲಿಮರಾಗಿ, ಕ್ರಿಶ್ಚಿಯನ್ನರಾಗಿ ಹಾಗೂ ಬೇರೆ ಧರ್ಮದವರು ಹಿಂದೂಗಳಾಗಿ ಮತಾಂತರವಾಗಿಲ್ಲವೇ? ಮುಸ್ಲಿಮರು ಹಿಂದೂ ಧರ್ಮದ ಆಚರಣೆಗಳನ್ನು ಮಾಡುತ್ತಿಲ್ಲವೇ? ಅಯೋಧ್ಯೆ ರಾಮನಿಗೆ ಹಿಂದೂಗಳು ಮಾತ್ರ ಬರಬೇಕು ಎಂದು ಏಕೆ ಬೋರ್ಡ್ ಹಾಕಿಲ್ಲ? ಬಿಜೆಪಿ ಸರ್ಕಾರ ಇದ್ದ ವೇಳೆ ಹಾಗೂ ಈಗ ಇಡೀ ದೇಶದಲ್ಲಿ ಹಜ್ ಕಮಿಟಿ, ಅಲ್ಪಸಂಖ್ಯಾತ ಇಲಾಖೆಗಳನ್ನು ಏಕೆ ರದ್ದು ಮಾಡಲಿಲ್ಲ? ಇದೆಲ್ಲವೂ ರಾಜಕೀಯ ಎಂದು ತಿರುಗೇಟು ನೀಡಿದರು.ನಮ್ಮದು ಜಾತ್ಯತೀತ ರಾಷ್ಟ್ರ. ನಮ್ಮ ಸಂವಿಧಾನದ ಮೂಲಕ ಎಲ್ಲರಿಗೂ ಅವಕಾಶ, ಸ್ವಾತಂತ್ರ್ಯ ಕಲ್ಪಿಸಲಾಗಿದೆ.‌ ಎಲ್ಲರಿಗೂ ಸಂವಿಧಾನದ ರಕ್ಷಣೆಯಿದೆ. ಎಲ್ಲರಿಗೂ ಅವರವರ ನಂಬಿಕೆ ಮೇಲೆ ವಿಶ್ವಾಸವಿದೆ. ಮುಸ್ಲಿಂ ಅಥವಾ ಕ್ರಿಶ್ಚಿಯನ್ ಹೆಣ್ಣು, ಹಿಂದೂ ಅಥವಾ ಇತರೇ ಧರ್ಮದ ಗಂಡಿಗೆ ಜನಿಸಿದ ಮಕ್ಕಳು ತಮಗೆ ಬೇಕಾದ್ದನ್ನು ಅನುಸರಿಸುತ್ತಾರೆ ಎಂದರು.

ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವ ಬಗ್ಗೆ ಯಾರು ಏನು ಹೇಳಿದ್ದಾರೆ?:

ಈ ಬಾರಿ ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಬೂಕರ್‌ ಪ್ರಶಸ್ತಿ ವಿಜೇತೆ ಬಾನು‌ ಮುಸ್ತಾಕ್ ಆಯ್ಕೆ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಸಾಹಿತಿ ಬಾನು ಮುಷ್ತಾಕ್​ ಆಯ್ಕೆ ಬಗ್ಗೆ ಸಂಸದ ಯದುವೀರ್ ಅವರು ಮಾತನಾಡಿ, ‘ನಾನೂರು ವರ್ಷದ ಪರಂಪರೆಯಿಂದ ಚಾಮುಂಡೇಶ್ವರಿ ತಾಯಿಯನ್ನು ನಾವೆಲ್ಲಾ ಆರಾಧಿಸುತ್ತ ಬಂದಿದ್ದೇವೆ. ಈ ನಿಟ್ಟಿನಲ್ಲಿ ಬಾನು ಮುಷ್ತಾಕ್ ಅವರು ಚಾಮುಂಡೇಶ್ವರಿಗೆ ತಾಯಿಗೆ ಗೌರವ ಕೊಟ್ಟು, ನಮ್ಮ ಭಾವನೆಗಳಿಗೆ ಧಕ್ಕೆಯಾಗದಂತೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರಾ? ಎಂಬ ಪ್ರಶ್ನೆ ಮೂಡುತ್ತದೆ. ಇದಕ್ಕೆ ಅವರೇ ಸ್ಪಷ್ಟನೆ ನೀಡಬೇಕು’ ಎಂದು ​ಒತ್ತಾಯಿಸಿದ್ದಾರೆ.ಈ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮಾತನಾಡಿ, ‘ಧಾರ್ಮಿಕ ಸಂಕೇತವಾದ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಸೂಕ್ತ ವ್ಯಕ್ತಿ ಆಗುತ್ತಾರಾ?’ ಎಂದು ಪ್ರಶ್ನಿಸಿದ್ದರು.

[t4b-ticker]
error: Content is protected !!