ಬೆಂಗಳೂರು-ಮಂಗಳೂರು ಹೆದ್ದಾರಿ ಚಾರ್ಮಾಡಿ ಘಾಟಿಯಿಂದ ದ.ಕ ಜಿಲ್ಲೆಗೆ ಬರುವ ವಾಹನಗಳಿಗೆ ನೂತನ ನಿಯಮ

Picture of Savistara

Savistara

Bureau Report

ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಹೊಸ ನಿಯಮ ಜಾರಿಗೆ ಬಂದಿದೆ. ಕನಿಷ್ಠ ಐದು ವಾಹನಗಳು ಒಟ್ಟಾದ ನಂತರವೇ ಸಂಚಾರಕ್ಕೆ ಅವಕಾಶವಿದ್ದು, ಕೊಟ್ಟಿಗೆಹಾರ ಚೆಕ್ ಪೋಸ್ಟ್‌ನಲ್ಲಿ ವಾಹನ ತಪಾಸಣೆ ಕಡ್ಡಾಯ ಮಾಡಲಾಗಿದೆ. ಗೋ ಕಳ್ಳತನ ತಡೆಗಟ್ಟಲು ಹಾಗೂ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗಿದೆ. ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ರಸ್ತೆ ಬಂದ್ ಆಗಿರಲಿದೆ.

ಬೆಳ್ತಂಗಡಿ: ಚಿಕ್ಕಮಗಳೂರು-ದಕ ಜಿಲ್ಲೆಯನ್ನು ಕರಾವಳಿಯನ್ನು ಸಂಪರ್ಕಿಸುವ, ಬೆಂಗಳೂರು-ಮಂಗಳೂರು ಹೆದ್ದಾರಿಯಾಗಿರುವ ಚಾರ್ಮಾಡಿ ಘಾಟಿಯಲ್ಲಿ ಇದೀಗ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಹೊಸ ನಿಯಮ ಜಾರಿಗೆ ಬಂದಿದೆ. ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಇನ್ನು ಮುಂದೆ ಒಂದೆರಡು ವಾಹನಗಳಿಗಲ್ಲ, ಕನಿಷ್ಠ ಐದು ವಾಹನಗಳು ಒಟ್ಟಾದ ಬಳಿಕ ಸಂಚಾರಕ್ಕೆ ಅವಕಾಶ ಸಿಗಲಿದೆ.

ರಾತ್ರಿ ವೇಳೆ ಕೊಟ್ಟಿಗೆಹಾರ ಚೆಕ್ ಪೋಸ್ಟ್ ದಾಟುವ ಎಲ್ಲಾ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಿ, ಐದು ವಾಹನಗಳು ಒಟ್ಟಾಗಿ ಹೊರಡುವಂತೆ ವ್ಯವಸ್ಥೆ ರೂಪಿಸಲಾಗಿದೆ.

ದಟ್ಟ ಅರಣ್ಯದಿಂದ ಸುತ್ತುವರಿದ ಈ ಘಾಟಿಯಲ್ಲಿ ರಾತ್ರಿ ವೇಳೆ ಗೋ ಕಳ್ಳತನ ಹಾಗೂ ಅಪರಾಧ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರುಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಪೊಲೀಸರು ಮುಂದಾಗಿದ್ದಾರೆ.

ಕೊಟ್ಟಿಗೆಹಾರ ಚೆಕ್ ಪೋಸ್ಟ್‌ನಲ್ಲಿ ಈಗಿರುವ ಬ್ಯಾರಿಕೇಡ್ ಬದಲಾಗಿ ಹೊಸ ಬ್ಯಾರಿಯರ್ ನಿರ್ಮಿಸಲಾಗುತ್ತಿದೆ. ರಾತ್ರಿ ವೇಳೆ ಒಬ್ಬ ಪಿಎಸ್ ಐ ನೇತೃತ್ವದಲ್ಲಿ ಪೊಲೀಸರು ಕಾವಲು ನಿಲ್ಲಲಿದ್ದಾರೆ. ಜತೆಗೆ ಚೆಕ್ ಪೋಸ್ಟ್‌ನಿಂದ ಒಂದೂವರೆ ಕಿಮೀ ದೂರದಲ್ಲಿ ಇರುವ ಕಚ್ಚಾ ರಸ್ತೆಯನ್ನು ಗೋ ಕಳ್ಳರು ದುರುಪಯೋಗ ಮಾಡುತ್ತಿದ್ದರೆಂಬ ದೂರು ಬಂದ ಹಿನ್ನೆಲೆಯಲ್ಲಿ, ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿ ಆ ರಸ್ತೆಯಲ್ಲಿ ಗೇಟ್ ನಿರ್ಮಿಸಲು ನಿರ್ಧರಿಸಲಾಗಿದೆ. ಈ ಗೇಟ್ ರಾತ್ರಿ 10ರಿಂದ ಬೆಳಿಗ್ಗೆ 6ರ ವರೆಗೆ ಮುಚ್ಚಿರಲಿದೆ. ಈ ನೂತನ ಸಂಚಾರ ವ್ಯವಸ್ಥೆ ಈಗಾಗಲೇ ಜಾರಿಗೆ ಬಂದಿದೆ.

ಘಾಟಿಯಲ್ಲಿ ವಿಪರೀತ ಮಂಜಿನ ವಾತಾವರಣ, ಕಾಡಾನೆ ಸಹಿತ ವನ್ಯ ಮೃಗಗಳ ತಿರುಗಾಟ, ಮರ ಗೆಲ್ಲುಗಳು ಬಿದ್ದು ಸಂಚಾರ ವ್ಯತ್ಯಯ ಉಂಟಾಗುವುದು, ಅಪಘಾತ ನಡೆಯುವ ಸಂದರ್ಭಗಳಲ್ಲಿ ,ಮೊಬೈಲ್ ನೆಟ್ವರ್ಕ್ ಇಲ್ಲದಿರುವುದು ಇತ್ಯಾದಿ ಕಾರಣಗಳಿಗೆ ಈ ವ್ಯವಸ್ಥೆ ಉತ್ತಮವಾಗಿದೆ.

ಚಾರ್ಮಾಡಿಯಲ್ಲೂ ತಪಾಸಣೆದಕ ಜಿಲ್ಲೆಯ ಕೊನೆಯ ಭಾಗವಾದ ಚಾರ್ಮಾಡಿಯಲ್ಲಿಯೂ ಪೋಲಿಸ್ ಚೆಕ್ ಪೋಸ್ಟ್ ಇದೆ. ಇದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತದೆ.ಇಲ್ಲಿಂದ ಚಿಕ್ಕಮಗಳೂರು ಕಡೆ ಸಾಗುವ ವಾಹನಗಳನ್ನು ತಪಾಸಣೆ ನಡೆಸಲಾಗುತ್ತದೆ. ಆದರೆ ಇಲ್ಲಿ ರಾತ್ರಿ ವೇಳೆ ಐದು ವಾಹನಗಳಿಗೆ ಏಕಕಾಲದಲ್ಲಿ ಪ್ರವೇಶಿಸುವ ನಿಯಮವನ್ನು ಸದ್ಯಕ್ಕೆ ರೂಪಿಸಲಾಗಿಲ್ಲ.”ಕೊಟ್ಟಿಗೆಹಾರ ಚೆಕ್ ಪೋಸ್ಟ್ ಮೂಲಕ ಹಾದು ಹೋಗುವ ಎಲ್ಲಾ ವಾಹನಗಳ ವಿವರಗಳು ಸಿಸಿಟಿವಿಯಲ್ಲಿ ದಾಖಲಾಗಲಿದ್ದು, ಪೊಲೀಸರ ದಾಖಲೆ ಪುಸ್ತಕದಲ್ಲೂ ಬರೆಯಲಾಗುತ್ತದೆ ಎಂದು ಹೇಳಿದ್ದಾರೆ ವಿಕ್ರಂ ಅಮಟೆ,ಎಸ್ ಪಿ, ಚಿಕ್ಕಮಗಳೂರು

[t4b-ticker]
error: Content is protected !!