ಬೆಂಗಳೂರು: ಸಾಲ ವಸೂಲಾತಿ ಕೆಲಸ ಸಮರ್ಪಕವಾಗಿ ನಡೆಯದೇ 2,200 ಹಾಲು ಉತ್ಪಾದಕ ಸಂಘಗಳೂ ಸೇರಿ ರಾಜ್ಯದಲ್ಲಿ 14,670 ಸಹಕಾರ ಸಂಘಗಳು ನಷ್ಟದಲ್ಲಿವೆ.
ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಗುರುವಾರ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಕುರಿತು ಮಾಹಿತಿ ನೀಡಿದರು.’28,516 ಸಹಕಾರ ಸಂಘಗಳು ಲಾಭದಲ್ಲಿವೆ. ಅವುಗಳ ಅರ್ಧದಷ್ಟು ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿಯಲ್ಲಿನ ಸಮಸ್ಯೆಗಳೇ ಈ ನಷ್ಟಕ್ಕೆ ಕಾರಣ. ವಸೂಲಾತಿಗೆ ಕೈಗೊಂಡ ಕ್ರಮಗಳ ಬಗ್ಗೆ ತ್ವರಿತವಾಗಿ ಪರಿಶೀಲನೆ ನಡೆಸಬೇಕು. ಹಾಲು ಉತ್ಪಾದಕ ಸಹಕಾರ ಸಂಘಗಳ ವೆಚ್ಚದ ಮೇಲೆ ನಿಗಾ ಇರಿಸಬೇಕು. ಹಾಲು ಉತ್ಪಾದನೆಯನ್ನು ಹೆಚ್ಚಿಸಲು ಸಂಘಗಳ ಕಾರ್ಯದರ್ಶಿಗಳು ಶ್ರಮಿಸಬೇಕು. ಪುನಶ್ಚತನಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.ಈ ಸಾಲಿನಲ್ಲಿ 37 ಲಕ್ಷ ರೈತರಿಗೆ ₹28 ಸಾವಿರ ಕೋಟಿ ಕೃಷಿ ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ₹8,362.68 ಕೋಟಿ ಸಾಲ ಮಾಡಲಾಗಿದೆ. ಸಾಲ ವಿತರಣೆಯಲ್ಲಿ ಶೇ96.07ರಷ್ಟು ಪ್ರಗತಿ ಸಾಧಿಸಲಾಗಿದೆ. 2024-25ನೇ ಸಾಲಿನಲ್ಲಿ 29,75,598 ರೈತರಿಗೆ ₹25,939.09 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ ಸಕಾಲದಲ್ಲಿ ಕೃಷಿ ಸಾಲ ಸಿಗುವುದನ್ನು ಖಾತ್ರಿಪಡಿಸಬೇಕು ಎಂದು ತಾಕೀತು ಮಾಡಿದರು.
ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ರಾಜ್ಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು. ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.










































