ಮಂಗಳೂರು: ಧರ್ಮಸ್ಥಳ ವಿರುದ್ಧ ಅಪಪ್ರಚಾರ, ಷಡ್ಯಂತರದ ವಿರುದ್ಧ ನಾಳೆ ಬಿಜೆಪಿಯಿಂದ ಧರ್ಮಸ್ಥಳ ಚಲೋ ಅಭಿಯಾನ” ನಡೆಸಲಾಗುತ್ತದೆ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು.ಶ್ರೀಕ್ಷೇತ್ರ ಧರ್ಮಸ್ಥಳದ ಸನ್ನಿಧಿ ವಸತಿಗೃಹದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಅಭಿಯಾನ ನಡೆಯಲಿದೆ. ಈ ಅಭಿಯಾನದಲ್ಲಿ ಬಿಜೆಪಿಯ ಶಾಸಕರು, ನಾಯಕರು, ಮುಖಂಡರು ಭಾಗಿಯಾಗಲಿದ್ದಾರೆ.
ಧರ್ಮಸ್ಥಳ ವಿರುದ್ಧದ ಅಪಪ್ರಚಾರ ಹಿನ್ನೆಲೆಯಲ್ಲಿ ವಿಜಯೇಂದ್ರ ಅವರು ಕ್ಷೇತ್ರದ ಪಾವಿತ್ರ್ಯತೆ ಉಳಿಯಲೆಂದು ಧರ್ಮಸ್ಥಳ ಚಲೋ ಅಭಿಯಾನ ಮಾಡುತ್ತಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದಲೂ ಕಾರ್ಯಕರ್ತರು ಬರುತ್ತಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸೋಮಣ್ಣ, ಶೋಭಾ ಕರಂದ್ಲಾಜೆ ಭಾಗಿಯಾಗಲಿದ್ದಾರೆ.ಎಸ್ಐಟಿ ತನಿಖೆಯನ್ನು ಮೊದಲು ಸ್ವಾಗತ ಮಾಡಿದ್ದೇ ಬಿಜೆಪಿ.
ಪ್ರಕರಣದ ಎಲ್ಲಾ ಆಯಾಮಗಳಲ್ಲೂ ತನಿಖೆಯಾಗಲಿ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡುವವರಿಗೆ ಕಮ್ಯುನಿಸ್ಟ್ ಪಾರ್ಟಿ, ಎಸ್ಡಿಪಿಐ ಸಂಘಟನೆಗಳು ಹಣ ಸಹಾಯ ಮಾಡುತ್ತಿದೆ. ನಿಷೇಧಿತ ಪಿಎಫ್ಐ ಸಂಘಟನೆಯಲ್ಲಿ ಇರುವವರು ಈಗ ಎಸ್ಡಿಪಿಐನಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷ ಎಸ್ಡಿಪಿಐನೊಂದಿಗೆ ಹೊಂದಾಣಿಕೆ ಮಾಡಿ ಚುನಾವಣೆ ಎದುರಿಸಿತ್ತು. ಆದ್ದರಿಂದ ಪ್ರಕರಣ ಎನ್ಐಎ ತನಿಖೆ ಆಗಬೇಕು ಅನ್ನುವುದು ನಮ್ಮ ಆಗ್ರಹ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು.











































