ಕಾವೇರಿ ಸಂಕ್ರಮಣ; ತಲಕಾವೇರಿಯಲ್ಲಿ ಈ ಶುಭಮುಹೂರ್ತದಲ್ಲಿ ಆಗಲಿದೆ ತೀರ್ಥೋದ್ಭವ

Picture of Savistara

Savistara

Bureau Report

ಮಡಿಕೇರಿ: ಕನ್ನಡ ನಾಡಿನ ಜೀವನದಿ ಕಾವೇರಿಯ ಉಗಮಸ್ಥಾನವಾದ ತಲಕಾವೇರಿಯಲ್ಲಿ ಅಕ್ಟೋಬರ್ 17 ರಂದು ಮಧ್ಯಾಹ್ನ 1.44 ಗಂಟೆಗೆ ಮಕರ ಲಗ್ನದ ಶುಭ ಮುಹೂರ್ತದಲ್ಲಿ ಪವಿತ್ರ ತೀರ್ಥೋದ್ಭವವಾಗಲಿದೆ.ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದ ಸಮಿತಿ ಶ್ರೀ ಕಾವೇರಿ ತುಲಾ ಸಂಕ್ರಮಣದ ಪವಿತ್ರ ತೀರ್ಥೋದ್ಭವ ಮತ್ತು ಜಾತ್ರೆಯ ಕಾರ್ಯಕ್ರಮಗಳನ್ನು ಬಿಡುಗಡೆಗೊಳಿಸಿದೆ.ಕಾವೇರಿ ತುಲಾ ಸಂಕ್ರಮಣ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಇದೇ ಸೆ.26 ರಂದು ಭಾಗಮಂಡಲದ ಶ್ರೀ ಭಗಂಡೇಶ್ವರ ದೇಗುಲದಲ್ಲಿ ಬೆಳಿಗ್ಗೆ 9.31 ಗಂಟೆಗೆ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅ.4ರಂದು ಬೆಳಗ್ಗೆ 8.33 ಗಂಟೆಗೆ ತುಲಾ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅ.14 ರಂದು ಬೆಳಗ್ಗೆ 11.45 ರ ಧನು ಲಗ್ನದಲ್ಲಿ ಅಕ್ಷಯ ಪಾತ್ರೆ ಇಡುವುದು, ಅದೇ ದಿನ ಸಂಜೆ 4.25ಕ್ಕೆ ಮೀನ ಲಗ್ನದಲ್ಲಿ ಕಾಣಿಕೆ ಡಬ್ಬಿ ಇಡುವ ಕಾರ್ಯಕ್ರಮಗಳು ನಡೆಯಲಿದೆ.ಅಕ್ಟೋಬರ್ 17 ರಂದು ಮಧ್ಯಾಹ್ನ 1.44 ಗಂಟೆಗೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವವಾಗಲಿದೆ.

ಸಚಿವರಿಂದ ಸಭೆ

ಕಾವೇರಿ ತುಲಾ ಸಂಕ್ರಮಣ ಜಾತ್ರಾ ಮಹೋತ್ಸವದ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಜನಪ್ರತಿನಿಧಿಗಳು, ದೇವಾಲಯ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.ಭಾಗಮಂಡಲದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಬಾರಿ ಅಧಿಕ ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಮತ್ತು ಭಕ್ತರ ಸುರಕ್ಷತೆಯನ್ನು ಕಾಪಾಡಬೇಕು ಎಂದು ಸೂಚನೆ ನೀಡಿದರು.ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

[t4b-ticker]
error: Content is protected !!