ಬೆಂಗಳೂರು: ‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಬ್ರಾಹ್ಮಣ ಸಮುದಾಯದವರು ಜಾತಿ/ ಧರ್ಮವನ್ನು ಮಾತ್ರ ಉಲ್ಲೇಖಿಸಬಹುದು. ಇತರೆ 59 ಪ್ರಶ್ನೆಗಳಿಗೆ ಉತ್ತರಿಸುವುದು ಅವರವರ ವಿವೇಚನೆಗೆ ಬಿಟ್ಟಿದ್ದು’ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾ ತಿಳಿಸಿದೆ.
‘ಸಮೀಕ್ಷೆಯಲ್ಲಿನ ಅವೈಜ್ಞಾನಿಕ ಅಂಶ ಹಾಗೂ ನ್ಯೂನತೆ ಪ್ರಶ್ನಿಸಿ ಮಹಾಸಭಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ಮಧ್ಯಂತರ ಆದೇಶ ನೀಡಲಾಗಿದೆ. ಸಮೀಕ್ಷೆಯಲ್ಲಿ ಸ್ವ ಇಚ್ಛೆಯಿಂದ ಭಾಗವಹಿಸಬಹುದು. ಸಮೀಕ್ಷೆ ವೇಳೆ ಮಾಹಿತಿ ನೀಡುವುದು ಕಡ್ಡಾಯವಲ್ಲ ಎಂದು ಹೈಕೋರ್ಟ್ ತಿಳಿಸಿದೆ’ ಎಂದು ಮಹಾಸಭಾ ಅಧ್ಯಕ್ಷ ಎಸ್ ರಘುನಾಥ್ ಹೇಳಿದ್ದಾರೆ.“ಹೈಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ ಸಮೀಕ್ಷೆಯು ಸಂಪೂರ್ಣವಾಗಿ ಸ್ವಯಂಪ್ರೇರಿತ. ಯಾವುದೇ ವ್ಯಕ್ತಿಯನ್ನು ಸಮೀಕ್ಷೆಯಲ್ಲಿ ಭಾಗವಹಿಸಲು ಒತ್ತಾಯಿಸಲಾಗುವುದಿಲ್ಲ ಎನ್ನುವ ಕುರಿತು ಹಿಂದುಳಿದ ವರ್ಗದ ಆಯೋಗವು ಸಾರ್ವಜನಿಕ ಪ್ರಕಟಣೆ ಹೊರಡಿಸಬೇಕಾಗಿದೆ’ ಎಂದು ತಿಳಿಸಿದ್ದಾರೆ.’ಸಮೀಕ್ಷೆಯಲ್ಲಿ ಭಾಗವಹಿಸುವುದರಿಂದ ಬ್ರಾಹ್ಮಣ ಸಮುದಾಯಕ್ಕೆ ಸರ್ಕಾರದಿಂದ ಯಾವುದೇ ನೇರ ಅಥವಾ ಪರೋಕ್ಷ ಸಹಕಾರ ಸಿಗುತ್ತದೆ ಎನ್ನುವ ನಂಬಿಕೆಯಿಲ್ಲ. ಸಮೀಕ್ಷೆಯ ವಿರುದ್ಧ ಮಹಾಸಭಾ ತನ್ನ ಕಾನೂನು ಹೋರಾಟ ಮುಂದುವರಿಸಲಿದೆ’ ಎಂದು ಹೇಳಿದ್ದಾರೆ.











































