ಬೆಂಗಳೂರು:ಕುಮಾರಸ್ವಾಮಿ(HDK) ಅವರು ನನ್ನ ವಿಚಾರದಲ್ಲಿಕೇವಲ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ಇದಕ್ಕೆ ಕೊನೇ ಹಾಡಬೇಕು. ಮಾಧ್ಯಮಗಳೇ ಒಂದು ಸೂಕ್ತ ವೇದಿಕೆ ಕಲ್ಪಿಸಲಿ. ನಾನು, ಕುಮಾರಸ್ವಾಮಿ ಅವರ ಜೊತೆ ಬಹಿರಂಗ ಚರ್ಚೆ ಮಾಡಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದಿದ್ದಾರೆ.ಕೆಪಿಸಿಸಿ ಕಚೇರಿ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ನೀವು ಜೈಲಿಗೆ ಹೋಗುವ ದಿನ ಹತ್ತಿರವಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರಲ್ಲಾ ಎಂದು ಕೇಳಿದಾಗ, “ಮೊದಲಿನಿಂದಲೂ ನನ್ನನ್ನು ಜೈಲಿಗೆ ಹಾಕಿಸಲೇಬೇಕು ಎಂದು ಕುಮಾರಸ್ವಾಮಿ ಅವರು ಸಂಕಲ್ಪ ಮಾಡಿ ಷಡ್ಯಂತ್ರ ಮಾಡುತ್ತಿದ್ದಾರೆ. ಈಗಲೂ ಅದನ್ನೇ ಮುಂದುವರಿಸುತ್ತಿರುವುದಾಗಿ ಅವರೇ ಹೇಳಿದ್ದು, ಜೈಲಿಗೆ ಹೋಗುವ ದಿನ ಹತ್ತಿರಬರುತ್ತಿದೆ ಎಂದಿದ್ದಾರೆ. ಹಬ್ಬ ಮುಗಿದ ಬಳಿಕ ಅವರಿಗೆ ಉತ್ತರ ನೀಡುತ್ತೇನೆ” ಎಂದು ತಿಳಿಸಿದರು.
ನನ್ನ ಕುಟುಂಬದ ಮೇಲೆ ನಡೆಸುವ ಷಡ್ಯಂತ್ರ ಹೊಸತಲ್ಲ
“ಕುಮಾರಸ್ವಾಮಿ ಅವರು ತಮ್ಮ ಆಸೆ ವ್ಯಕ್ತಪಡಿಸಿದ್ದಾರೆ. ಅವರಿಗೆ ಒಳ್ಳೆಯದಾಗಲಿ. ಅವರ ಕುಟುಂಬ ನನ್ನ ಕುಟುಂಬದ ಮೇಲೆ ನಡೆಸುವ ಷಡ್ಯಂತ್ರ ಹೊಸತಲ್ಲ. ಈ ಹಿಂದೆ ನನ್ನ ತಂಗಿ, ತಮ್ಮ ಸೇರಿದಂತೆ ಎಲ್ಲರ ಮೇಲೂ ಪ್ರಯತ್ನ ಮಾಡಿದ್ದರು. ಇದಕ್ಕೆ ಕೊನೆ ಹಾಡಬೇಕು. ಈಗಲೂ ಅದನ್ನೇ ಮುಂದುವರಿಸುತ್ತಿರುವುದಾಗಿ ಅವರೇ ಹೇಳಿದ್ದು, ಜೈಲಿಗೆ ಹೋಗುವ ದಿನ ಹತ್ತಿರ ಬರುತ್ತಿದೆ ಎಂದಿದ್ದಾರೆ. ಅವರಿಗೆ ಉತ್ತರ ನೀಡುತ್ತೇನೆ. ಯಾವುದಾದರೂ ಒಂದು ಪ್ರತಿಷ್ಠಿತ ಮಾಧ್ಯಮದಲ್ಲಿ ಅವರನ್ನು ಹಾಗೂ ನನ್ನನ್ನು ಕರೆಸಿ ಎಂದು ಸವಾಲು ಹಾಕಿದರು.
ಈ ಹಿಂದೆ ಸಾತನೂರಿನಲ್ಲಿ ಟಿ- 20 ಪಂದ್ಯ ನಡೆದಂತೆ ನಡೆಯಲಿ. ನಾನು ವಿಧಾನಸಭೆಯಲ್ಲಿ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದೆ. ಅವರು ಸಂಸತ್ತಿಗೆ ಹೊರಟು ಹೋದರು. ಅವರ ಬದಲು ಬೇರೆ ನಾಯಕರ ಜೊತೆ ಚರ್ಚೆ ಮಾಡೋಣ ಎಂದರೆ ಅವರ ಪಕ್ಷದಲ್ಲಿ ನಮಗೆ ಸರಿಸಮನಾದ ನಾಯಕರಿಲ್ಲ. ಹೀಗಾಗಿ ಮಧ್ಯಮಗಳೇ ನಮ್ಮ ನಡುವಿನ ಚರ್ಚೆಗೆ ವೇದಿಕೆ ಸಿದ್ಧಪಡಿಸಲಿ. ಈ ಹಿಂದೆ ಬಹಳಷ್ಟು ಬಾರಿ ಚರ್ಚೆಗೆ ಆಹ್ವಾನ ನೀಡಿದ್ದೆ, ಈಗಲೂ ಹೇಳುತ್ತಿದ್ದೇನೆ. ಸುಮ್ಮನೇ ಹಿಟ್ ಅಂಡ್ ರನ್ ಮಾಡುವುದಲ್ಲ. ನನ್ನ ವಿರುದ್ಧ ಅವರು ಮಾಡಿರುವ ಆರೋಪಗಳ ಬಗ್ಗೆ ಬಹಿರಂಗ ಚರ್ಚೆ ನಡೆಯಲಿ. ಅವರ ಕುಟುಂಬದ ಬಗ್ಗೆ ನನ್ನ ಬಳಿ ಇರುವ ಭಂಡಾರದಿಂದ ನಾನು ದಾಖಲೆಗಳನ್ನು ತೆಗೆದು ಇಡುತ್ತೇನೆ, ಅವರು ತಮ್ಮ ಭಂಡಾರದಿಂದ ನನ್ನ ವಿರುದ್ಧ ಇರುವ ದಾಖಲೆಗಳನ್ನು ಜನರ ಮುಂದಿಡಲಿ ಎಂದು ಕುಟುಕಿದರು.“ಜೈಲಿಗೆ ಹಾಕುವ ಅಧಿಕಾರ ಇರುವುದು ನ್ಯಾಯಾಧೀಶರಿಗೆ ಮಾತ್ರ. ನನ್ನ ವಿಚಾರದಲ್ಲಿ ಅವರೇ ನ್ಯಾಯಾಧೀಶರಂತೆ ಮಾತನಾಡುತ್ತಿದ್ದಾರೆ. ನ್ಯಾಯದೀಶರಂತೆ ವರ್ತಿಸುತ್ತಿರುವ ಅವರೂ ಕೂಡ ನ್ಯಾಯಾಲಯಕ್ಕೆ ಹೋಗುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.











































