ಭಾರತೀಯ ಹವಾಮಾನ ಇಲಾಖೆ ದಕ್ಷಣ ಒಳನಾಡು ಸೇರಿದಂತೆ ಕರಾವಳಿ ಕರ್ನಾಟಕಕ್ಕೆ ಅಕ್ಟೋಬರ್ 23ರ ಗುರುವಾರ ಅರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಸೈಕ್ಲೋನ್ ರೂಪುಗೊಂಡಿದ್ದು, ಇದರ ಪರಿಣಾಮ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಇದರೊಂದಿಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಬೆಂಗಳೂರಿನಲ್ಲಿ ಮುಂದಿನ ಒಂದು ವಾರದ ಕಾಲ ಸೈಕ್ಲೋನ್ ಎಫೆಕ್ಟ್ ಇರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಮುಂದಿನ ಎರಡ್ಮೂರು ದಿನಗಳಲ್ಲಿ ಸೈಕ್ಲೋನ್ ಪ್ರಭಾವ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.
ಈ ಹವಾಮಾನ ವೈಪರೀತ್ಯದ ಪರಿಣಾಮವಾಗಿ, ವಾರವಿಡೀ ಬೆಂಗಳೂರು ಮತ್ತು ಇತರ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಹಾಸನ, ಮೈಸೂರು, ತುಮಕೂರು, ಮಂಡ್ಯ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಭಾರೀ ಮಳೆಯ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಜಿಲ್ಲೆಗಳು ಮಾತ್ರವಲ್ಲದೇ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಿಗೂ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಉಳಿದಂತೆ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ.
ಕರ್ನಾಟಕದಲ್ಲಿ ಇಂದು ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿರುವ ಮಾಹಿತಿ ಅನ್ವಯ ಬೆಂಗಳೂರಿನಲ್ಲಿ ಗಾಳಿಯಗುಣಮಟ್ಟ 94 AQI ಇರಲಿದೆ. ದಿನಪುತ್ರಿ ಮೋಡ ಮುಸುಕಿದ ವಾತಾವರಣದೊಂದಿಗೆ ಭಾರೀ ಮಳೆಯೊಂದಿಗೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಎಚ್ಚರಿಕೆಯನ್ನ ನೀಡಲಾಗಿದೆ.
ಕಳೆದ ಎರಡು ದಿನಗಳಿಂದಲೂ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಲವರು ಹಬ್ಬರ ಸಂಭ್ರಮದೊಂದಿಗೆ ರಸ್ತೆಗಳಲ್ಲಿ ನೀರು ನಿಂತಿರುವ, ಮಳೆಯಾಗುತ್ತಿರುವ ವಿಡಿಯೋ ಹಾಗೂ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಉಳಿದಂತೆ ಅಕ್ಟೋಬರ್ 24 ಮತ್ತು 25ರಂದು ಕೂಡ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿದ್ದು, ಟ್ರಾಫಿಕ್ ಜಾಪ್, ತಗ್ಗು ಪ್ರದೇಶಗಳಲ್ಲಿ, ರಸ್ತೆಗಳ ಮೇಲೆ ನೀರು ನಿಲ್ಲುವ ಎಚ್ಚರಿಕೆಯನ್ನು ನೀಡಿದೆ. ಪರಿಣಾಮ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಅಕ್ಟೋಬರ್ 24ರ ಶುಕ್ರವಾರವೂ ರಾಜ್ಯವ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮೈಸೂರು, ಮಂಡ್ಯ, ತುಮಕೂರು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.














































