ತುಮಕೂರು: ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡರ ಜತೆಗೆ ಸೆಲ್ಪಿ ತೆಗೆದುಕೊಂಡ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸೆಲ್ಸಿ ತೆಗೆದುಕೊಂಡ ಮಾತ್ರಕ್ಕೆ ಕನ್ನಡ ವಿರೋಧಿ ಮನಸ್ಥಿತಿ ಹೊಂದಿದ್ದಾರೆ ಎಂದು ಭಾವಿಸಲಾಗದು. ಕನ್ನಡ ನಾಡಿನ ಬದ್ದತೆ, ತತ್ವಕ್ಕೆ ವಿರುದ್ಧವಾಗಿ ಹೋಗುವ ಯಾವುದೇ ಅಧಿಕಾರಿ, ವ್ಯಕ್ತಿಯ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಕನ್ನಡ ನಾಡು, ನೆಲ, ಜಲ, ಭಾಷೆ ರಕ್ಷಣೆ ವಿಷಯದಲ್ಲಿ ಯಾವುದೇ ರಾಜಿ ಆಗುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.’ದಲಿತರ ಸಮಾವೇಶಕ್ಕೆ ಹೈಕಮಾಂಡ್ ತಡೆ ಹಾಕಿದೆಯೇ’ ಎಂಬ ಪ್ರಶ್ನೆಗೆ ಉತ್ತರಿಸಿ, ‘ದಲಿತರ ಸಮಾವೇಶಕ್ಕೆ ಯಾರು ಬ್ರೇಕ್ ಹಾಕಿಲ್ಲ. ಆಗುವ ಸಮಯದಲ್ಲಿ ಆಗುತ್ತದೆ’ ಎಂದು ಪ್ರತಿಕ್ರಿಯಿಸಿದರು.














































