ನವದೆಹಲಿ: 2028ರಲ್ಲಿ ಮುಖ್ಯಮಂತ್ರಿಯಾಗಬೇಕು ಎಂದು ಕನಸು ಹೊತ್ತಿರುವ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಗಾದಿಗೆ ಮತ್ತೆ ಪ್ರಯತ್ನ ನಡೆಸಿದ್ದಾರೆ.
ನವದೆಹಲಿಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಮಂಗಳವಾರ ರಾತ್ರಿ ಭೇಟಿ ಮಾಡಿ, ಸುಮಾರು ಅರ್ಧ ಗಂಟೆ ಚರ್ಚಿಸಿದರು. ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ದ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.`ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಸಂದರ್ಭದಲ್ಲೇ ಡಿ.ಕೆ. ಶಿವಕುಮಾರ್ ಅವರು ಲೋಕಸಭಾ ಚುನಾವಣೆಯವರೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಹೈಕಮಾಂಡ್ ತಿಳಿಸಿತ್ತು. ಎರಡೂವರೆ ವರ್ಷ ಕಳೆದರೂ ಬದಲಾವಣೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕಳೆದ ಐದೂವರೆ ವರ್ಷಗಳಿಂದ ಶಿವಕುಮಾರ್ ಅವರೇ ಅಧ್ಯಕ್ಷರಾಗಿದ್ದಾರೆ. ಈ ಸ್ಥಾನಕ್ಕೆ ನನ್ನನ್ನು ಪರಿಗಣಿಸಬೇಕೆಂದು ಒತ್ತಾಯಿಸಿದರು ಎಂದು ಮೂಲಗಳು ತಿಳಿಸಿವೆ.ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಶಿವಕುಮಾರ್ ಅವರನ್ನು ಎತ್ತಂಗಡಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ವರ್ಷದಿಂದ ಪ್ರಯತ್ನ ನಡೆಸುತ್ತಿದೆ. ಈ ಬಗ್ಗೆ ಈ ಹಿಂದೆಯೂ ಹೈಕಮಾಂಡ್ಗೆ ಮನವಿ ಸಲ್ಲಿಸಿತ್ತು. ಸತೀಶ ಜಾರಕಿಹೊಳಿ ಅಥವಾ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಈ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಸಿದ್ದರಾಮಯ್ಯ ಅವರು ಹೈಕಮಾಂಡ್ಗೆ ಶಿಫಾರಸು ಮಾಡಿದ್ದರು.
ಅಧ್ಯಕ್ಷ ಸ್ಥಾನದಿಂದ ಶಿವಕುಮಾರ್ ಅವರನ್ನು ಕೆಳಗಿಳಿಸಿ ದುರ್ಬಲಗೊಳಿಸಬೇಕು ಎನ್ನುವುದು ಎದುರು ಬಣದ ಯೋಚನೆ. ಸಚಿವ ಸಂಪುಟ ಪುನರಚನೆಗೆ ಮುನ್ನವೇ ಅಧ್ಯಕ್ಷರ ಬದಲಾಯಿಸಬೇಕು ಎಂದು ಗಂಭೀರ ಪ್ರಯತ್ನ ನಡೆಸಿದೆ. ಇದರ ಭಾಗವಾಗಿಯೇ ಜಾರಕಿಹೊಳಿ ದೆಹಲಿ ಯಾತ್ರೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ನವೆಂಬರ್ ಕ್ರಾಂತಿ ಹಾಗೂ ಅಧಿಕಾರ ಹಸ್ತಾಂತರದ ಬಗ್ಗೆ ಪಕ್ಷದ ವಲಯದಲ್ಲಿ ನಿತ್ಯ ಚರ್ಚೆ ಆಗುತ್ತಿದೆ. ಈ ಗೊಂದಲ ನಿವಾರಿಸಬೇಕು. ನಾಯಕತ್ವ ಬದಲಾವಣೆ ಮಾಡಬಾರದು ಎಂದೂ ಆಗ್ರಹಿಸಿದರು.











































