ಚೆನ್ನೈ: ತಮಿಳುನಾಡಿನಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರ ವಿವಿಧ ಜಿಲ್ಲೆಗಳ ಆಡಳಿತಕ್ಕೆ ಸೂಚನೆ ನೀಡಿದೆ.
ಶ್ರೀಲಂಕಾದ ಆಗ್ನೆಯ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡ ನೈಋತ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳಲ್ಲಿ ವಾಯುಭಾರ ಕುಸಿತವಾಗಿದ್ದು, ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಮನ್ನಾರ್ ಕೊಲ್ಲಿ ಮತ್ತು ಕನ್ಯಾಕುಮಾರಿ ಪ್ರದೇಶಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ತುರ್ತು ಕಾರ್ಯಾಚರಣೆ ಮೂಲಕ ಪರಿಸ್ಥಿತಿಯನ್ನು ಗಮನಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಮುಂದಿನ 24 ಗಂಟೆಗಳಲ್ಲಿ ತಂಜಾವೂರು, ಶಿವಗಂಗಾ, ರಾಮನಾಥಪುರಂ ಮತ್ತು ವಿಲ್ಲುಪುರಂನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.











































