ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ನಾಯಕತ್ವಕ್ಕಾಗಿ ನಡೆಯುತ್ತಿರುವ ತಿಕ್ಕಾಟದ ವಿಷಯ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಪ್ರಸ್ತಾಪವಾಗಿದೆ.
ಗೊಂದಲ ನಿವಾರಿಸುವಂತೆ ಗೃಹ ಸಚಿವ ಜಿ. ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಸೇರಿದಂತೆ ಕೆಲವು ಹಿರಿಯ ಸಚಿವರ ತಂಡ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ.ಸಚಿವ ಸಂಪುಟ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಅಸಮಾಧಾನ ವ್ಯಕ್ತಪಡಿಸಿದ ಗೃಹ ಸಚಿವ ಜಿ. ಪರಮೇಶ್ವರ, ‘ಕೆಲವು ಸಚಿವರು, ಶಾಸಕರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ಹೋಗುತ್ತಿದ್ದಾರೆ. ಹೊರಗಡೆ ಏನೇನೊ ಆಗುತ್ತಿದೆ. ಮಾಧ್ಯಮದವರು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದಾರೆ. ನಾವು ಅದಕ್ಕೆ ಉತ್ತರಿಸಬೇಕಾಗಿದೆ. ಈ ವಿಷಯದ ಬಗ್ಗೆ ಸ್ಪಷ್ಟತೆ ಬೇಕಿದೆ. ಇದು ಸಂಪುಟಕ್ಕೆ ಸಂಬಂಧಿಸಿದ ವಿಷಯ ಅಲ್ಲವೇ ಎಂದು ನೇರವಾಗಿ ಪ್ರಶ್ನಿಸಿದ್ದಾರೆ’ ಎಂದು ಗೊತ್ತಾಗಿದೆ.’ಈ ವಿಚಾರದಲ್ಲಿ ಸಚಿವ ಸಂಪುಟವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ನಾವು ಹಿರಿಯ ಸಚಿವರು ಹೈಕಮಾಂಡ್ ನಾಯಕರನ್ನು ಭೇಟಿ ಆಗಬಹುದಲ್ಲವೇ ಎಂದೂ ಕೇಳಿದ್ದಾರೆ. ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹೌದು ಖರ್ಗೆಯವರು ದೂರವಾಣಿ ಕರೆ ಮಾಡಿದ್ದರು. ನಾಲೈದು ಮಂದಿ ಹಿರಿಯರನ್ನು ಕರೆದುಕೊಂಡು ಬನ್ನಿ. ಚರ್ಚೆ ಮಾಡೋಣ ಎಂದು ಖರ್ಗೆ ಹೇಳಿದ್ದಾರೆ. ಅದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಇದೇನು ದೊಡ್ಡ ವಿಷಯ ಅಲ್ಲ. ನಾನೇ ದೆಹಲಿಗೆ ಎಲ್ಲರನ್ನೂ ಕರೆದುಕೊಂಡು ಹೋಗುತ್ತೇನೆ ಎಂದಿದ್ದಾರೆ ಎಂದು ಮೂಲಗಳು ಹೇಳಿವೆ.













































