ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಸ್ಪೀಕರ್ ಯು.ಟಿ.ಖಾದರ್ ಸಹಿತ ಹಲವು ಜನ ಗಣ್ಯರು ಭಾಗಿ*ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ನೀಡಲಾಗುವ 2024ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನ.30 ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಿತು.ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸಾಧಕರಿಗೆ ಗೌರವ ಪ್ರಶಸ್ತಿ ಪ್ರದಾನ ಮಾಡಿದರು.

ಸಾಹಿತ್ಯ ಮತ್ತು ಪತ್ರಿಕೋದ್ಯಮ ಸೇವೆಗಾಗಿ ಸುದ್ದಿ ಸಮೂಹ ಸಂಸ್ಥೆಯ ಮಾಲಕ ಡಾ.ಯು.ಪಿ. ಶಿವಾನಂದ, ಅರೆಭಾಷೆ ಸಾಹಿತ್ಯ ಮತ್ತು ಶೈಕ್ಷಣಿಕ ಸೇವೆಗಾಗಿ ಕೆ.ಆರ್.ಗಂಗಾಧರ, ಸಂಘಟನೆ ಮತ್ತು ಆಡಳಿತಾತ್ಮಕ ಸೇವೆಗಾಗಿ ಡಿ.ಎಸ್.ಆನಂದ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕರ್ನಾಟಕ ವಿಧಾನಸಭಾಧ್ಯಕ್ಷ ಡಾ.ಯು.ಟಿ. ಖಾದರ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕರಾದ ಪೊನ್ನಣ್ಣ, ಮಡಿಕೇರಿ ಶಾಸಕರಾದ ಡಾ. ಮಂಥರ್ ಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಕುಮಾರ್, ನಿರ್ದೇಶಕಿ ಕೆ.ಎಂ. ಗಾಯತ್ರಿ , ಸೇರಿದಂತೆ ಗಣ್ಯರು ಭಾಗವಹಿಸಿದ್ದರು.ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿಯವರು ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.ಅರೆಭಾಷೆ ಅಕಾಡೆಮಿ ಸದಸ್ಯ ಡಾ. ಎನ್.ಎ.ಜ್ಞಾನೇಶ್ ಸ್ವಾಗತಿಸಿದರು.













































