ಮೈಸೂರು: ‘ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರತಿ ಜೋಡಿಗೆ ₹ 50ಸಾವಿರ ಸಹಾಯಧನ ನೀಡಲಾಗುವುದು’ ಎಂದು ನರಸಿಂಹರಾಜ ಕ್ಷೇತ್ರದ ಶಾಸಕ ತನ್ವಿರ್ ಸೇಠ್ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಸರಳ ವಿವಾಹದ ಪ್ರೋತ್ಸಾಹಧನ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಮೈಸೂರು ಜಿಲ್ಲೆಗೆ 150 ಗುರಿ ನಿಗದಿಪಡಿಸಲಾಗಿದ್ದು, ಅರ್ಹ ಫಲಾನುಭವಿಗಳನ್ನು ಗುರುತಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.“ಅರ್ಜಿ ಸಲ್ಲಿಸುವ ಅಲ್ಪಸಂಖ್ಯಾತ ವಧುವಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 42 ವರ್ಷಗಳು ಹಾಗೂ ವರನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸಾಗಿರಬೇಕು. ಬಾಲ್ಯವಿವಾಹಕ್ಕೆ ಆಸ್ಪದ ಕೊಡದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು’ ಎಂದು ನಿರ್ದೇಶನ ನೀಡಿದರು.“ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಈ ಯೋಜನೆಗಾಗಿ ಫಲಾನುಭವಿಗಳನ್ನು ಗುರುತಿಸಲು ಹೆಚ್ಚಿನ ಶ್ರಮ ವಹಿಸಿ ಕೆಲಸ ನಿರ್ವಹಿಸಬೇಕು. ತಂದೆ ಅಥವಾ ತಾಯಿ ಇಲ್ಲದ ವಧುವನ್ನು ಗುರುತಿಸಿ ಸರಳ ವಿವಾಹ ಯೋಜನೆಯ ಸವಲತ್ತು ಒದಗಿಸಿದರೆ ಯೋಜನೆ ಹೆಚ್ಚಿನ ಸಾರ್ಥಕತೆ ಪಡೆಯುತ್ತದೆ’ ಎಂದು ತಿಳಿಸಿದರು.
“ಅಲ್ಪಸಂಖ್ಯಾತ ಸಮುದಾಯದಡಿ ಬರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಅವರಿಗೆ ಸರಳ ವಿವಾಹ ಯೋಜನೆಯಡಿ ಅರ್ಜಿ ಆಹ್ವಾನಿಸಬೇಕು. ಹೆಚ್ಚಿನ ಪ್ರಚಾರ ಕೊಡಬೇಕು. ಕೆಲವು ಸಮುದಾಯದಿಂದ ಅರ್ಜಿ ಬಾರದಿದ್ದಲ್ಲಿ ಬೇರೆ ಸಮುದಾಯಕ್ಕೆ ಹೆಚ್ಚುವರಿಯಾಗಿ ನೀಡುವುದು ಉತ್ತಮ’ ಎಂದರು.“ಯೋಜನೆಯಡಿ ಅರ್ಜಿ ಸ್ವೀಕೃತಿಯಾದ ನಂತರ ವಧು ಹಾಗೂ ವರ ನೀಡಿರುವ ವಯಸ್ಸಿನ ದಾಖಲಾತಿಗಳನ್ನು ಪರಿಶೀಲಿಸಿ ಹಾಗೂ ಅವರು ವಾಸವಿರುವ ಸ್ಥಳಕ್ಕೆ ಭೇಟಿ ಕೊಟ್ಟು ಖಾತ್ರಿಪಡಿಸಿಕೊಳ್ಳಬೇಕು. ವರನಿಗೆ ಪತ್ನಿ ಹಾಗೂ ವಧುವಿಗೆ ಪತಿ ಇಲ್ಲದಿರುವುದನ್ನು ಖಾತ್ರಿಪಡಿಸಿಕೊಂಡು ನಂತರ ಯೋಜನೆಯ ಸೌಲಭ್ಯ ಒದಗಿಸಿಕೊಡಬೇಕು’ ಎಂದು ತಿಳಿಸಿದರು.ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ‘ವಯಸ್ಸಿನ ಬಗ್ಗೆ ಪರಿಶೀಲಿಸುವಾಗ ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಜನನ ಪ್ರಮಾಣಪತ್ರವನ್ನು ಪರಿಗಣಿಸಬೇಕು. ವಿವಾಹ ನೋಂದಣಿಗೆ ನೋಂದಣಾಧಿಕಾರಿ ಕಚೇರಿಯೊಂದಿಗೆ ಸಮನ್ವಯ ಸಾಧಿಸಿ ಕ್ರಮ ಕೈಗೊಳ್ಳಬೇಕು’ ಎಂದರು.ಮಹಾನಗರ ಪಾಲಿಕೆಯ ಆಯುಕ್ತ ಶೇಖ್ ತನ್ನೀರ್ ಆಸೀಫ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಿಲ್ಪಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಎಸ್.ಎಚ್. ನಿರ್ಮಲಾ ಉಪಸ್ಥಿತರಿದ್ದರು.













































