ಪುತ್ತೂರಿನ ಸುಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳಿಗೆ ಸದ್ಯಕ್ಕೆ ಒಂದು ನಿರಾಸೆಯ ಸುದ್ದಿ, ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಸಾದ್’ (PRASHAD) ಯೋಜನೆಯಡಿ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರಸಿಂಗ್ ಶೆಖಾವತ್ ಸ್ಪಷ್ಟಪಡಿಸಿದ್ದಾರೆ.
ಮಂಗಳೂರು: ಪುತ್ತೂರಿನ ಸುಪ್ರಸಿದ್ಧ ಮಹಾಲಿಂಗೇಶ್ವರದೇವಸ್ಥಾನದ ಭಕ್ತಾದಿಗಳಿಗೆ ಸದ್ಯಕ್ಕೆ ಒಂದು ನಿರಾಸೆಯ ಸುದ್ದಿ. ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಸಾದ್’ (PRASHAD) ಯೋಜನೆಯಡಿ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರಸಿಂಗ್ ಶೆಖಾವತ್ ಸ್ಪಷ್ಟಪಡಿಸಿದ್ದಾರೆ.ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು, ಈ ಯೋಜನೆಯಡಿ ಪುತ್ತೂರು ಮಹಾಲಿಂಗೇಶ್ವರ ದೇಗುಲಕ್ಕೆ ಸದ್ಯಕ್ಕೆ ಯಾವುದೇ ಅನುದಾನ ಲಭ್ಯವಿಲ್ಲ ಎಂದು ತಿಳಿಸಿದ್ದಾರೆ.
ಯೋಜನೆ ಜಾರಿಗೆ ರಾಜ್ಯದ ಹೊಣೆಗಾರಿಕೆ!
ಪ್ರವಾಸಿ ತಾಣಗಳ ಅಭಿವೃದ್ಧಿಯು ಮೂಲತಃ ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಸಚಿವರು ವಿವರಿಸಿದ್ದಾರೆ. ರಾಜ್ಯ ಸರ್ಕಾರಗಳು ಸೂಕ್ತ ಪ್ರಸ್ತಾವನೆಗಳನ್ನು ಕೇಂದ್ರ ಪ್ರವಾಸೋದ್ಯಮ ಇಲಾಖೆಗೆ ಸಲ್ಲಿಸಬೇಕು. ಇಲಾಖೆಯ ಮಾರ್ಗಸೂಚಿಗಳ ಅನ್ವಯ ಈ ಪ್ರಸ್ತಾವನೆಗಳನ್ನು ಮೌಲ್ಯಮಾಪನ ಮಾಡಲಾಗುತ್ತದೆ. ನಿಗದಿತ ಮಾನದಂಡಗಳನ್ನು ಪೂರೈಸಿದಲ್ಲಿ ಮತ್ತು ಅನುದಾನದ ಲಭ್ಯತೆ ಇದ್ದಲ್ಲಿ ಮಾತ್ರ ಆರ್ಥಿಕ ನೆರವು ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ. ಅಂದರೆ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ‘ಪ್ರಸಾದ್’ ಯೋಜನೆ ಬೇಕಿದ್ದರೆ, ಕರ್ನಾಟಕ ಸರ್ಕಾರವು ಕೇಂದ್ರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕಿದೆ.
ಕರ್ನಾಟಕದ ಇತರೆ ದೇವಾಲಯಗಳಿಗೆ ಸಿಕ್ಕಿದೆ ಪ್ರಸಾದ!
ಈ ಮಧ್ಯೆ, ರಾಜ್ಯದ ಇತರೆ ಕೆಲವು ಪ್ರಮುಖ ದೇವಸ್ಥಾನಗಳಿಗೆ ಈಗಾಗಲೇ ‘ಪ್ರಸಾದ್’ ಯೋಜನೆಯಡಿ ಅನುದಾನ ಹರಿದುಬಂದಿದೆ. ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ, ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನ ಹಾಗೂ ಬೀದರ್ನ ಪಾಪನಾಶ ದೇವಸ್ಥಾನಗಳಲ್ಲಿ ಈ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು.













































