ಧರ್ಮಸ್ಥಳದ ಧರ್ಮಾಧಿಕಾರಿಗಳ ವಿರುದ್ಧ ನಡೆದ ಅಪಪ್ರಚಾರ ಮತ್ತು ಷಡ್ಯಂತ್ರದ ಹಿಂದೆ ಬಿಜೆಪಿ ಮತ್ತು ಆರ್ಎಸ್ಎಸ್ ನಡುವಿನ ಆಳವಾದ ಭಿನ್ನಾಭಿಪ್ರಾಯಗಳೇ ಕಾರಣ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಬೆಳಗಾವಿ: ಧರ್ಮಸ್ಥಳದ ಧರ್ಮಾಧಿಕಾರಿಗಳ ವಿರುದ್ಧ ನಡೆದ ಅಪಪ್ರಚಾರ ಮತ್ತು ಷಡ್ಯಂತ್ರದ ಹಿಂದೆ ಬಿಜೆಪಿ ಮತ್ತು ಆರ್ಎಸ್ಎಸ್ ನಡುವಿನ ಆಳವಾದ ಭಿನ್ನಾಭಿಪ್ರಾಯಗಳೇ ಕಾರಣ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಬೆಳಗಾವಿಯ ಸರ್ಕ್ಯೂಟ್ ಹೌಸ್ನಲ್ಲಿ ಬುಧವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
“ಧರ್ಮಸ್ಥಳದ ಇತಿಹಾಸ ಮತ್ತು ಪಾವಿತ್ರ್ಯತೆ ನನಗೆ ಗೊತ್ತು. ಅಲ್ಲಿನವರು ಯಾರು ಕೂಡ ತಪ್ಪು ಮಾಡುವುದಿಲ್ಲ ಎಂಬ ನಂಬಿಕೆ ನನಗಿತ್ತು. ಹೀಗಾಗಿಯೇ ಅಂದು ನಾನು ಧೈರ್ಯವಾಗಿ ಧರ್ಮಸ್ಥಳದ ಪರ ಮಾತನಾಡಿದ್ದೆ. ಇದೀಗ ಚಾರ್ಜ್ ಶೀಟ್ ಮೂಲಕ ಸತ್ಯ ಹೊರಬಂದಿದ್ದು, ದೂರುದಾರರೇ ಆರೋಪಿಗಳು ಎಂಬುದು ಸಾಬೀತಾಗಿದೆ. ಈ ಇಡೀ ಷಡ್ಯಂತ್ರದ ಹಿಂದೆ ಸಂಘ ಪರಿವಾರ ಮತ್ತು ಬಿಜೆಪಿಯ ಆಂತರಿಕ ಕಚ್ಚಾಟವಿದೆ” ಎಂದು ಡಿ.ಕೆ. ಶಿವಕುಮಾರ್ ವಿಶ್ಲೇಷಿಸಿದರು.
ಕ್ರಿಕೆಟ್ ಪಂದ್ಯಗಳು ಬೆಂಗಳೂರಿನಲ್ಲೇ:ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳ ಆಯೋಜನೆ ಕುರಿತು ಮಾತನಾಡಿದ ಅವರು, “ಐಪಿಎಲ್ ಸೇರಿದಂತೆ ಯಾವುದೇ ಕ್ರಿಕೆಟ್ ಪಂದ್ಯಗಳು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ. ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅನುಮತಿ ನೀಡುವ ತೀರ್ಮಾನ ಕೈಗೊಳ್ಳಲಿದ್ದೇವೆ. ಮೈಕಲ್ ಡಿ ಕುನ್ಹಾ ಸಮಿತಿಯ ವರದಿಯಂತೆ ಜನಜಂಗುಳಿ ನಿಯಂತ್ರಣ ಕ್ರಮಗಳನ್ನು ಹಂತ ಹಂತವಾಗಿ ಜಾರಿಗೆ ತರಲಾಗುವುದು. ಇದಕ್ಕೆ ಕೆಎಸ್ಸಿಎ ಕೂಡ ಒಪ್ಪಿಗೆ ಸೂಚಿಸಿದೆ.” ಎಂದು ಸ್ಪಷ್ಟಪಡಿಸಿದರು.
ರೈತರ ಸಮಸ್ಯೆ ಬಗೆಹರಿಸಿದ್ದೇವೆರೈತರ ವಿಚಾರಗಳನ್ನು ಸರ್ಕಾರ ಸರಿಯಾಗಿ ನಿಭಾಯಿಸಿಲ್ಲ ಎನ್ನುವ ವಿಪಕ್ಷಗಳ ಆರೋಪದ ಬಗ್ಗೆ ಕೇಳಿದಾಗ, “ಇದೆಲ್ಲವೂ ರಾಜಕೀಯ ಆರೋಪಗಳು. ನಮ್ಮ ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸಿದೆ. ಕಬ್ಬು ಹಾಗೂ ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ದೊಡ್ಡ ತೀರ್ಮಾನ ತೆಗೆದುಕೊಂಡಿದ್ದೇವೆ. ಬಿಜೆಪಿ ಈ ವಿಚಾರದಲ್ಲಿ ವಿಫಲವಾಗಿದೆ” ಎಂದರು.ದ್ವೇಷ ಭಾಷಣ ನಿಯಂತ್ರಣ:ದ್ವೇಷ ಭಾಷಣ ನಿಯಂತ್ರಣ ಮಸೂದೆ ಜಾರಿಗೆ ತರುವುದು ನಮ್ಮ ಸರ್ಕಾರದ ಅಜೆಂಡಾ ಆಗಿದೆ.ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಮುಖ್ಯ ಎಂದು ಇದೇ ವೇಳೆ ಡಿಸಿಎಂ ತಿಳಿಸಿದರು.ಚಿಕ್ಕಮಗಳೂರಿನ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಹಿನ್ನೆಲೆಯಲ್ಲಿ ಬಜರಂಗದಳ ನಿಷೇಧಿಸಬೇಕೆಂಬ ಬಿ.ಕೆ.ಹರಿಪ್ರಸಾದ್ ಹೇಳಿಕೆ ಬಗ್ಗೆ ಮಾಹಿತಿ ಪಡೆದು ಪ್ರತಿಕ್ರಿಯಿಸುವುದಾಗಿ ಹೇಳಿದರು.













































