ಕೋಯಿಕ್ಕೋಡ್ (ಕೇರಳ): ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಕೇರಳದ ಹಲವು ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಡೀ ಹಿಂಸಾಚಾರ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೋಯಿಕ್ಕೋಡ್ ಜಿಲ್ಲೆಯ ಏರಾಮಲದಲ್ಲಿ ಕಾಂಗ್ರೆಸ್ ಕಚೇರಿ ಇಂದಿರಾ ಗಾಂಧಿ ಭವನದ ಮೇಲೆ ಸಿಪಿಎಂ ಕಾರ್ಯಕರ್ತರು ದಾಳಿ ಮಾಡಿದ ಆರೋಪ ಕೇಳಿಬಂದಿದ್ದರಿಂದ ರಾತ್ರಿಯಿಡೀ ಉದ್ವಿಗ್ನತೆ ನೆಲೆಸಿತ್ತು.ಸುಮಾರು 200 ಮಂದಿಯ ಗುಂಪು ಮಾರಕಾಸ್ತ್ರಗಳನ್ನು ಹಿಡಿದು ಕಾಂಗ್ರೆಸ್ ಕಚೇರಿಯತ್ತ ಮೆರವಣಿಗೆ ನಡೆಸಿ ಕಟ್ಟಡಕ್ಕೆ ಹಾನಿ ಉಂಟುಮಾಡಿದ್ದಾರೆ. ಇದರಿಂದ ಸುಮಾರು ₹5 ಲಕ್ಷ ನಷ್ಟ ಉಂಟಾಗಿದೆ ಎಂದು ಎಡಚೇರಿ ಠಾಣೆಯಲ್ಲಿ ದಾಖಲಾದ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪ್ರತಿಮೆಗೂ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸುದ್ದಿ ಹರಡಿದ ಬೆನ್ನಲ್ಲೇ ಯುಡಿಎಫ್ ಕಾರ್ಯಕರ್ತರು ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಉದ್ವಿಗ್ನತೆ ನೆಲೆಸಿತು. ಸ್ಥಳಕ್ಕೆ ಇನ್ನಷ್ಟು ಪೊಲೀಸರನ್ನು ಕರೆಸಿ ಪರಿಸ್ಥಿತಿಯನ್ನು ನಿಯಂತ್ರಿಸಲಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಕಣ್ಣೂರು ಜಿಲ್ಲೆಯ ಪಾನೂರಿನಲ್ಲಿ ಮುಸ್ಲಿಂ ಲೀಗ್ನ ಹಲವು ಕಾರ್ಯಕರ್ತರ ಮನೆಗಳನ್ನು ಗುರಿಯಾಗಿಸಿ ಸಿಪಿಎಂ ಕಾರ್ಯಕರ್ತರು ದಾಳಿ ನಡೆಸಿದ್ದಾಗಿ ಆರೋಪಿಸಲಾಗಿದೆ. ಮನೆಗಳ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಹಾನಿಗೊಳಿಸಿದ್ದಾರೆ.ಯುಡಿಎಫ್ ವಿಜಯೋತ್ಸವಕ್ಕೆ ಸಿಪಿಎಂ ಕಾರ್ಯಕರ್ತರು ಅಡ್ಡಿಪಡಿಸಿದ್ದು ಸಂಘರ್ಷ ಉಂಟಾಗಲು ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.













































