ಬಿಕ್ಲು ಶಿವು ಕೊಲೆ ಪ್ರಕರಣ: ಶಾಸಕ ಬೈರತಿಗೆ ಸಿಐಡಿ ಶೋಧ

Picture of Savistara

Savistara

Bureau Report

ಬೆಂಗಳೂರು: ಬಿಕ್ಷು ಶಿವು ಕೊಲೆ ಪ್ರಕರಣದಲ್ಲಿ ಕೆ.ಆರ್. ಪುರವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರಿಗೆ ಬಂಧನದ ಭೀತಿ ಎದುರಾಗಿದ್ದು, ಅವರು ಹೊರರಾಜ್ಯದಲ್ಲಿ ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸಿಐಡಿ ಪೊಲೀಸರು ಶಾಸಕರಿಗೆ ಹುಡುಕಾಟ ನಡೆಸುತ್ತಿದ್ದಾರೆ ಎಂದು ಗೊತ್ತಾಗಿದೆ.ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಷು ಶಿವು ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ ಸೇರಿದಂತೆ ಐವರ ವಿರುದ್ಧ ಭಾರತೀನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿತ್ತು. ಬಸವರಾಜ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿತ್ತು. ಅರ್ಜಿ ತಿರಸ್ಕಾರದ ಬೆನ್ನಲ್ಲೇ ಶಾಸಕರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲು ಸಿಐಡಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ.’ಬಸವರಾಜ ಅವರು ಬೆಳಗಾವಿಯಲ್ಲಿ ನಡೆದಿದ್ದ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಂಡಿದ್ದರು. ಅರ್ಜಿ ವಜಾ ಆಗುತ್ತಿದ್ದಂತೆಯೇ ಶಾಸಕರು ತಲೆಮರೆಸಿಕೊಂಡಿರುವ ಶಂಕೆಯಿದೆ. ತನಿಖೆಗೆ ವಿಶೇಷ ತಂಡಗಳನ್ನು ಈ ಹಿಂದೆಯೇ ರಚಿಸಲಾಗಿತ್ತು. ಶಾಸಕರು ಪುಣೆಯಲ್ಲಿ ಇರುವ ಮಾಹಿತಿಯಿದೆ. ಅಲ್ಲಿಗೂ ಒಂದು ತಂಡವನ್ನು ಕಳುಹಿಸಲಾಗಿದೆ. ಜನಪ್ರತಿನಿಧಿಗಳ ಕೋರ್ಟ್‌ನಲ್ಲೂ ನಿರೀಕ್ಷಣಾ ಜಾಮೀನು ಕೋರಿ ಶಾಸಕರು ಅರ್ಜಿ ಸಲ್ಲಿಸಿರುವ ಮಾಹಿತಿ ಸಿಕ್ಕಿದೆ. ನ್ಯಾಯಾಲಯದ ಮುಂದಿನ ಆದೇಶ ಗಮನಿಸಿ, ಕಾನೂನು ಪ್ರಕ್ರಿಯೆ ನಡೆಸಲಾಗುವುದು’ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಜುಲೈ 15ರ ರಾತ್ರಿ ಮನೆ ಎದುರು ನಿಂತಿದ್ದಾಗ ಬಿಕ್ಷು ಶಿವು ಅವರ ಕೊಲೆ ನಡೆದಿತ್ತು. ಮೃತ ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮಿ ಅವರು ನೀಡಿದ ದೂರು ಆಧರಿಸಿ ಜಗದೀಶ್ (ಎ1), ಕಿರಣ್ (ಎ2), ವಿಮಲ್ (ಎ3), ಅನಿಲ್ (ಎ4), ಬೈರತಿ ಬಸವರಾಜ (ಎ5) ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ 17 ಮಂದಿಯನ್ನು ಭಾರತಿನಗರ ಠಾಣೆಯ ಪೊಲೀಸರು ಬಂಧಿಸಿದ್ದರು.ಅದಾದ ಮೇಲೆ ಪ್ರಕರಣದ ಮುಂದಿನ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ರಾಜ್ಯ ಸರ್ಕಾರವು ಆದೇಶಿಸಿತ್ತು.’ಜಾಗದ ವಿಚಾರವಾಗಿ ಜಗದೀಶ್, ಕಿರಣ್, ವಿಮಲ್, ಅನಿಲ್ ಮತ್ತು ಇತರರು ಶಾಸಕ ಬೈರತಿ ಬಸವರಾಜ ಅವರ ಕುಮ್ಮಕ್ಕಿನಿಂದ ಕೊಲೆ ಮಾಡಿದ್ದಾರೆ’ ಎಂದು ವಿಜಯಲಕ್ಷ್ಮಿ ಅವರ ಆಧರಿಸಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು.

[t4b-ticker]
error: Content is protected !!