ದೆಹಲಿ/ಬೆಂಗಳೂರು: ಇತ್ತೀಚೆಗೆ ಬಿಜೆಪಿಯ ನೂತನ ರಾಷ್ಟ್ರೀಯಅಧ್ಯಕ್ಷರಾಗಿ ಆಯ್ಕೆಯಾಗಿರುವ ನಿತೀನ್ ನವೀನ್ರನ್ನು, ಬಿಜೆಪಿ ರಾಜಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ ಮಾಡಿ ಶುಭಾಶಯ ಕೋರಿದ್ದಾರೆ.ಈ ವಿಷಯವಾಗಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ವಿಜಯೇಂದ್ರ, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ನಿತೀನ್ ನವೀನ್ಜೀ ರವರನ್ನು ನವದೆಹಲಿಯಲ್ಲಿ ಇಂದು ಭೇಟಿ ಮಾಡಿ ಸಮಾಲೋಚನೆ ನಡೆಸಲಾಯಿತು. ಇತ್ತೀಚೆಗೆ ಅಧ್ಯಕ್ಷರ ಜವಾಬ್ದಾರಿ ವಹಿಸಿಕೊಂಡಿರುವ ಶ್ರೀ ನಿತಿನ್ ಜೀ ರವರ ನಾಯಕತ್ವ ಪಕ್ಷಕ್ಕೆ ಹೆಚ್ಚಿನ ಚೈತನ್ಯವನ್ನು ನೀಡಿದೆ. ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಪಕ್ಷ ಮತ್ತಷ್ಟು ಎತ್ತರಕ್ಕೆ ಬೆಳೆಯುವ ವಿಶ್ವಾಸ ನಮ್ಮ ಪ್ರತಿಯೊಬ್ಬ ಕಾರ್ಯಕರ್ತರಿಗಿದೆ.
ಈ ಸಂದರ್ಭದಲ್ಲಿ ರಾಜ್ಯದಲ್ಲಿನ ಪಕ್ಷದ ಚಟುವಟಿಕೆಗಳು ಹಾಗೂ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕುರಿತಂತೆ ವಿಸ್ತ್ರತವಾಗಿ ಚರ್ಚಿಸಲಾಯಿತು ಎಂದು ಬರೆದುಕೊಂಡಿದ್ದಾರೆ.
ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ
ಜ. 20 ರಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನವೀನ್ ಅಧಿಕಾರ ವಹಿಸಿಕೊಂಡರು.
ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರು ಅವಿರೋಧವಾಗಿ ನಿತಿನ್ ನಬಿನ್ ಅವರ ಹೆಸರನ್ನು ಅಧ್ಯಕ್ಷರಾಗಿ ಘೋಷಣೆ ಮಾಡಿದರು. ಈ ವೇಳೆ ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ಹಾಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ನಿತಿನ್ ಗಡ್ಕರಿ, ಕಿರಣ್ ರಿಜಿಜು ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.












































