ಮಂಗಳೂರು, ಫೆ.6: “ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ ಹೈಕಮಾಂಡ್ ಎಂಬಂತೆ ಹೇಳಿಕೆ ನೀಡಿರುವಾಗ ಅವರನ್ನೇ ಹೈಕಮಾಂಡ್ ಎಂದು ಸ್ವೀಕಾರ ಮಾಡೋಣ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.’ಐದು ವರ್ಷಗಳಿಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದು ಹೈಕಮಾಂಡ್ ಹಸಿರು ನಿಶಾನೆ ತೋರಿದ್ದು, ಯಾವುದೇ ಊಹಾಪೋಹ ಇಲ್ಲ’ ಎಂದು ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಬಗ್ಗೆ ಮಂಗಳೂರಿನಲ್ಲಿಂದು ಮಾಧ್ಯಮದವರ ಪ್ರಶ್ನೆಗೆ ಉಪ ಮುಖ್ಯಮಂತ್ರಿ ಈ ರೀತಿ ವ್ಯಂಗ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಶಾಸಕ ಬಸವರಾಜು ಅಧಿಕಾರ ಒಪ್ಪಂದದ ಬಗ್ಗೆ ಸ್ಪಷ್ಟನೆ ಬೇಕು ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಬಸವರಾಜು, ಯತೀಂದ್ರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಏನೇ ಪ್ರತಿಕ್ರಿಯೆ ನೀಡುವುದಿದ್ದರೂ ದಿಲ್ಲಿಯವರು ಪ್ರತಿಕ್ರಿಯೆ ನೀಡಬೇಕು” ಎಂದು ತಿಳಿಸಿದರು.
ಮಾರ್ಚ್ ನಲ್ಲಿ ಕಾಂಗ್ರೆಸ್ ಪಕ್ಷದ ನೂರು ಕಚೇರಿಗಳಿಗೆ ಶಿಲಾನ್ಯಾಸ
“ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ನೂರು ಕಚೇರಿಗಳಿಗೆ ಶಿಲಾನ್ಯಾಸ ನೆರವೇರಿಸಲು ನಿರ್ದೇಶನ ನೀಡುತ್ತಿದ್ದೇನೆ. ಎಐಸಿಸಿಯವರು ದಿನಾಂಕ ಕೊಡಲಿ, ಬಿಡಲಿ ನಾನಂತೂ ಎಲ್ಲ ಸಿದ್ಧತೆ ಮಾಡಿಕೊಂಡು ಪ್ರಾರಂಭ ಮಾಡುತ್ತೇನೆ” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
“ಇಂದು ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ. ಮಾರ್ಚ್ 10ಕ್ಕೆ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆರು ವರ್ಷ ಪೂರ್ಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಆರಂಭಿಸುತ್ತಿದ್ದೇನೆ” ಎಂದು ತಿಳಿಸಿದರು.
ಕಾಂಗ್ರೆಸ್ ನಿಂದ ಜಾತಿ ಮೇಲೆ ಅಲ್ವ, ನೀತಿ ಮೇಲೆ ರಾಜಕಾರಣ
ಶಿಲಾನ್ಯಾಸ ಕಾರ್ಯಕ್ರಮಕ್ಕೆ ಮುಸ್ಲಿಮ್ ಮುಖಂಡರನ್ನು ಕರೆದಿಲ್ಲ ಎಂಬ ಆರೋಪದ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಜಾತಿ ಮೇಲೆ ಅಲ್ವ ನೀತಿ ಮೇಲೆ ರಾಜಕಾರಣ ಮಾಡುತ್ತದೆ. ನಮಗೆ ಎಲ್ಲ ಜಾತಿ, ಧರ್ಮದವರು ಬೇಕು. ನಾವು ಜಾತಿ ಹಾಗೂ ಧರ್ಮದ ಮೇಲೆ ರಾಜಕಾರಣ ಮಾಡುವುದಿಲ್ಲ. ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಇದು ನಮ್ಮ ಪಕ್ಷದ ಸಿದ್ಧಾಂತ. ಯಾರೋ ಅಸೂಯೆ ಇರುವವರು ಈ ರೀತಿ ಮಾಡುತ್ತಾರೆ” ಎಂದರು.












































