ಸಂಪುಟ ದರ್ಜೆ ಸ್ಥಾನ: ನಿಲುವು ತಿಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

Picture of Savistara

Savistara

Bureau Report

ಬೆಂಗಳೂರು: ’48 ಶಾಸಕರನ್ನು ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿ, ಸಂಪುಟ ದರ್ಜೆಯ ಸ್ಥಾನ ನೀಡಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ’ ಎಂದು ಆಕ್ಷೇಪಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನಿಮ್ಮ ನಿಲುವು ಏನೆಂಬುದನ್ನು ಸ್ಪಷ್ಟಪಡಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಸಂಬಂಧ, ಸೂರಿ ಪಾಯಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.’ಅರ್ಜಿದಾರರು ಪ್ರಸ್ತಾಪ ಮಾಡಿರುವ ವಿಷಯದ ಬಗ್ಗೆ ನಿಮ್ಮ ನಿಲುವು ಏನೆಂಬುದನ್ನು ತಿಳಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಮಾರ್ಚ್ 4 ಮುಂದೂಡಿತು.ಕೋರಿಕೆ: ‘ಈ ನೇಮಕಾತಿ ಸಂವಿಧಾನದ 102 ಮತ್ತು 192ನೇ ವಿಧಿಗೆ ಮತ್ತು ಪ್ರಜಾಪ್ರತಿನಿಧಿ ಕಾಯ್ದೆ-1951ಕ್ಕೆ ವಿರುದ್ಧವಾಗಿದೆ. ಅಂತೆಯೇ, ಸುಪ್ರೀಂ ಕೋರ್ಟ್‌ನ ಮಾನದಂಡಗಳಿಗೂ ವ್ಯತಿರಿಕ್ತವಾಗಿದೆ. ಲಾಭದಾಯಕ ಹುದ್ದೆಗಳಲ್ಲಿರುವ ಈ ನೇಮಕಾತಿಗಳನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು. ನೇಮಕಗೊಂಡಿರುವವರನ್ನು ತಕ್ಷಣವೇ ಆಯಾ ಸ್ಥಾನಗಳಿಂದ ತೆಗೆದುಹಾಕಬೇಕು. ಅವರಿಗೆ ನೀಡಿರುವ ಎಲ್ಲ ಸೌಲಭ್ಯಗಳನ್ನೂ ಹಿಂಪಡೆಯಲು ಆದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ವೀಸಾ ಅವಧಿ ವಿಸ್ತರಣೆ ಕೋರಿಕೆ: ನೋಟಿಸ್‌

ಬೆಂಗಳೂರು: ಎರಡು ವರ್ಷಗಳ ಹಿಂದೆಯೇ ಮುಕ್ತಾಯಗೊಂಡ ವೀಸಾ ಅವಧಿ ವಿಸ್ತರಣೆ ಮಾಡುವಂತೆ ಕೋರಿ ಸುಡಾನ್ ಪ್ರಜೆಯೊಬ್ಬರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.ಈ ಸಂಬಂಧ ಸುಡಾನ್ ಪ್ರಜೆ ಅವಾಬ್ ಆದಿಲ್ ಅಹಮದ್ ಮೊಹಮದ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಮಾರ್ಚ್ 6ಕ್ಕೆ ಮುಂದೂಡಿತು.ಅರ್ಜಿಯಲ್ಲಿ ಏನಿದೆ?: ಅರ್ಜಿದಾರರು ವಿದ್ಯಾರ್ಥಿ ವೀಸಾದಡಿಭಾರತಕ್ಕೆ ಬಂದು ಇಲ್ಲೇ ನೆಲಸಿದ್ದರು. 2023ರ ಆಗಸ್ಟ್ 9ರಂದು ವೀಸಾ ಅವಧಿ ಮುಕ್ತಾವಾಗಿದ್ದು, ವಿಸ್ತರಣೆ ಮಾಡಬೇಕು ಎಂದು ಕೋರಿ ವಿದೇಶಿಗರ ಪ್ರಾದೇಶಿಕ ನೋಂದಣಾಧಿಕಾರಿ ಕಚೇರಿಗೆ (ಎಫ್‌ಆರ್‌ಆರ್‌ಒ) 2025ರ ಸೆಪ್ಟೆಂಬರ್ 11ರಂದು ಅರ್ಜಿ ಸಲ್ಲಿಸಿದ್ದರು.ಈ ಅರ್ಜಿಯನ್ನು ತಿರಸ್ಕರಿಸಿ ಆನ್‌ಲೈನ್‌ ಹಿಂಬರಹ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

[t4b-ticker]
error: Content is protected !!