ಬೆಂಗಳೂರು: ವಿಧಾನಮಂಡಲದ ಉಭಯ ಸದನಗಳಲ್ಲಿ ಸೋಮವಾರದಿಂದ ಬಜೆಟ್ ಮೇಲಿನ ಚರ್ಚೆ ಆರಂಭವಾಗಲಿದೆ.ಮಾರ್ಚ್ 27ರವರೆಗೆ ಅಧಿವೇಶನ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು ₹ 4.48 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುವ ಜೊತೆಗೆ, ವಿವಿಧ ಯೋಜನೆಗಳಿಗೂ ಹಣ ಒದಗಿಸಿದ್ದಾರೆ.ಸಾಲದ ಹೊರೆ, ನೇಮಕಾತಿ ವಿಳಂಬ, ಗುತ್ತಿಗೆದಾರರ ಬಿಲ್ ಬಾಕಿ, ಎಸ್ಸಿಎಸ್ಪಿ ಟಿಎಸ್ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮತ್ತಿತರ ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿಬೀಳಲು ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸಿದ್ಧವಾಗಿವೆ.ವಿರೋಧ ಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡುವ ಜೊತೆಗೆ ಅಡುಗೆ ಅನಿಲ ದರ ಹೆಚ್ಚಳ, ಕೇಂದ್ರದ ಅನುದಾನ ತಾರತಮ್ಯ, ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ ಪ್ರಕರಣ, ದೇಶದ ವಿದೇಶಾಂಗ ನೀತಿಯ ವೈಫಲ್ಯ ಪ್ರಸ್ತಾಪಿಸಲು ಆಡಳಿತರೂಢ ಕಾಂಗ್ರೆಸ್ ಕೂಡ ತಯಾರಾಗಿದೆ.
ರಾಜ್ಯದ ಸಾಲ ₹ 8.20 ಲಕ್ಷ ಕೋಟಿಗೆ ಹೆಚ್ಚಳವಾಗಲಿದ್ದು, ಆ ಮೂಲಕ ರಾಜ್ಯವನ್ನು ದಿವಾಳಿ ಮಾಡಲಾಗಿದೆ. ಬಂಡವಾಳ ವೆಚ್ಚಕ್ಕೆ ಕೇವಲ ₹ 70 ಸಾವಿರ ಕೋಟಿ ನೀಡಲಾಗಿದೆ. ಖಾಲಿ ಹುದ್ದೆಗಳಿಗೆ ನೇಮಕ, ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಮುಂತಾದ ವಿಷಯಗಳನ್ನು ಮುಂದಿಟ್ಟು ಬಿಜೆಪಿ ವಾಗ್ದಾಳಿ ನಡೆಸುವ ಸಾಧ್ಯತೆಯಿದೆ.













































